ಉಡುಪಿ: ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಉಡುಪಿ ಲೆಫ್ಟಿನೆಂಟ್ ಕಮಾಂಡರ್ ಮಹಮ್ಮದ್ ಯಾಸಿನ್ ಅಪ್ಪಾಸಾಬ್ ಮುಲ್ತಾನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ವೈದ್ಯಕೀಯ ವಿದ್ಯಾರ್ಥಿಗಳು ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಗೊಳ್ಳುವ ಅವಕಾಶಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ನಿವೃತ್ತ ವೈದ್ಯಕೀಯ ಅಧೀಕ್ಷಕ ಡಾ. ಮುರಳೀಧರ ಶರ್ಮ ಮಾತನಾಡಿ, ಸ್ವಾತಂತ್ರ್ಯವು ಸ್ವೇಚ್ಛಾಚಾರವಾಗದೆ ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಸುವ ಮೂಲಕ ದೇಶದ ಅಭಿವೃದ್ಧಿಗೆ ಪೂರಕವಾಗಬೇಕು ಎಂದರು. ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಅಧ್ಯಕ್ಷತೆ ವಹಿಸಿ ಮಾತನಾಡಿ, 2047ರ ವೇಳೆಗೆ ಭಾರತವನ್ನು ಸುರಾಜ್ಯವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಮುನ್ನಡೆಯಬೇಕೆಂದು ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕ ಅನೀಶ್ ಕೆ. ಧ್ವಜಾರೋಹಣ ಹಾಗೂ ಧ್ವಜವಂದನಾ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯಾಧಿಕಾರಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಭಿಷೇಕ್ ಸ್ವಾಗತಿಸಿದರು, ಮೋನಿಷಾ ವಂದಿಸಿದರು. ರಕ್ಷಿತಾ ಪ್ರಭು ಕಾರ್ಯಕ್ರಮ ನಿರೂಪಿಸಿದರು.


