ಉಡುಪಿ : ನಗರದ ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು ಕಳೆದ ಸುಮಾರು ಇಪ್ಪತ್ತು ವರ್ಷಗಳಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಇತ್ತೀಚೆಗೆ ಸೇವೆಯನ್ನು ಸ್ಥಗಿತಗೊಳಿಸಿದ್ದು, ಕೇಂದ್ರದ ಬಾಗಿಲಿಗೆ ಬೀಗ ಜಡಿಯಲಾಗಿದೆ. ಕೇಂದ್ರ ಸ್ಥಗಿತಗೊಳಿಸಿರುವುದಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೇಂದ್ರದ ಮೇಲೆ ಅವಲಂಬಿತರಾಗಿದ್ದ ಸುತ್ತಮುತ್ತಲಿನ ನಾಗರಿಕರು ಇದೀಗ ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಶಿಶುಗಳಿಗೆ ಲಸಿಕೆ ಹಾಗೂ ಚುಚ್ಚುಮದ್ದು, ಗರ್ಭಿಣಿಯರಿಗೆ ನಿಯಮಿತ ತಪಾಸಣೆ ಮತ್ತು ಅಗತ್ಯ ಚಿಕಿತ್ಸೆಗಳು ಇಲ್ಲಿನ ಕೇಂದ್ರದಲ್ಲಿ ನಿಗದಿತ ಸಮಯದಲ್ಲಿ ಲಭ್ಯವಾಗುತ್ತಿದ್ದವು. ಅಲ್ಲದೆ ಜ್ವರ, ಶೀತ, ಕೆಮ್ಮು ಸೇರಿದಂತೆ ಸಾಮಾನ್ಯ ಕಾಯಿಲೆಗಳಿಗೂ ಇಲ್ಲಿಯೇ ಚಿಕಿತ್ಸೆ ದೊರೆಯುತ್ತಿತ್ತು.

ಕೇಂದ್ರ ಮುಚ್ಚಲ್ಪಟ್ಟ ಹಿನ್ನೆಲೆಯಲ್ಲಿ ಬಡ ಕುಟುಂಬಗಳ ಶಿಶುಗಳು, ಗರ್ಭಿಣಿಯರು ಹಾಗೂ ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಹಣ ತೆರಳಿ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯ ಸ್ಥಿತಿಗೆ ತಲುಪಿದ್ದಾರೆ. ಸರ್ಕಾರದ ಉಚಿತ ಆರೋಗ್ಯ ಸೇವೆಯಿಂದ ನಾಗರಿಕರು ವಂಚಿತರಾಗದಂತೆ ನೋಡಿಕೊಳ್ಳುವುದು ಆಡಳಿತ ವ್ಯವಸ್ಥೆಯ ಕರ್ತವ್ಯವಾಗಿದ್ದು, ಈ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕುಕ್ಕಿಕಟ್ಟೆಯ ನಗರ ಕುಟುಂಬ ಕಲ್ಯಾಣ ಕೇಂದ್ರವನ್ನು ತಕ್ಷಣ ಪುನರಾರಂಭಿಸುವಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.



