ಉಡುಪಿ: ನಾಗರಿಕರಿಗೆ ಸಂವಿಧಾನದಿಂದ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಅವುಗಳ ಸಂರಕ್ಷಣೆ ಮಾಡುವುದು ಸರಕಾರಿ ಅಧಿಕಾರಿಗಳ ಕರ್ತವ್ಯ ಎಂದು ಟಿ. ಶ್ಯಾಮ್ ಭಟ್ ಹೇಳಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧಿಸಿದ ದೂರುಗಳನ್ನು ಅಧಿಕಾರಿಗಳು ಸೌಜನ್ಯದಿಂದ ಆಲಿಸಿ, ನಿಯಮಾನುಸಾರ ವಿಲೇವಾರಿ ಮಾಡಬೇಕು. ಆಯೋಗದಿಂದ ಬಂದ ನೋಟಿಸ್ಗಳಿಗೆ ಸಕಾಲದಲ್ಲಿ ವರದಿ ಸಲ್ಲಿಸಬೇಕು. ತಪ್ಪು ಕಂಡುಬಂದಲ್ಲಿ ಶಿಸ್ತು ಕ್ರಮ ಹಾಗೂ ಕೆಲವೊಂದು ಗಂಭೀರ ಪ್ರಕರಣಗಳಲ್ಲಿ ಪರಿಹಾರ ಶಿಫಾರಸ್ಸು ಮಾಡಲಾಗುವುದು ಎಂದರು.

ಸಭೆಯಲ್ಲಿ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



