ಉಡುಪಿ : ಎರಡು ಖಾಸಗಿ ಬಸ್ಗಳ ಚಾಲಕರು ಹಾಗೂ ನಿರ್ವಾಹಕರ ನಡುವೆ ಓವರ್ಟೇಕ್ ವಿಚಾರಕ್ಕೆ ಸಂಬಂಧಿಸಿ ಉಂಟಾದ ಮನಸ್ತಾಪವು ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಗಲಾಟೆಗೆ ತಿರುಗಿದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವೇಳೆ ಒಂದು ಬಸ್ ಅನ್ನು ಹೆದ್ದಾರಿಗೆ ಅಡ್ಡವಾಗಿ ನಿಲ್ಲಿಸಿ ಚಾಲಕರು ಹಾಗೂ ನಿರ್ವಾಹಕರು ಪರಸ್ಪರ ವಾಗ್ವಾದ ನಡೆಸಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸಿದರು.

ಸ್ಥಳೀಯರ ಪ್ರಕಾರ, ಪಡುಬಿದ್ರಿ ಪೇಟೆಯಲ್ಲಿ ಬಸ್ ಚಾಲಕರು ಮತ್ತು ನಿರ್ವಾಹಕರ ಇಂತಹ ವರ್ತನೆ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಇದೇ ರೀತಿಯ ಘಟನೆಗಳು ನಡೆದಿದ್ದು, ಮತ್ತೆ ಮರುಕಳಿಸಿರುವುದು ಕಾನೂನು ಸುವ್ಯವಸ್ಥೆ ಬಗ್ಗೆ ಸಾರ್ವಜನಿಕರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆಯ ವೇಳೆ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರ ಮುಂದೆಯೇ ಸಾರ್ವಜನಿಕರು ಬಸ್ ಸಿಬ್ಬಂದಿಯ ದುರ್ವರ್ತನೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಯಾಣಿಕರ ಸುರಕ್ಷತೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವಂತಹ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.


ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ದರ್ಪ ಪ್ರದರ್ಶಿಸಿದ ಚಾಲಕರು ಮತ್ತು ನಿರ್ವಾಹಕರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಘಟನೆಯ ವಿಡಿಯೊ ಹಾಗೂ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.



