ಉಡುಪಿ: ಕಾರ್ಕಳ ತಾಲೂಕು ಬೈಲೂರು ಗ್ರಾಮದ ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳ್ಳುವವರೆಗೂ ಅದರ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ಉಡುಪಿ ನಿರ್ಮಿತಿ ಕೇಂದ್ರದ ಮೇಲಾಗಿದ್ದು, ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದ್ದಾರೆ.

ಥೀಮ್ ಪಾರ್ಕ್ ಆವರಣದಲ್ಲಿ ತಕ್ಷಣ ಸ್ವಚ್ಛತಾ ಕಾರ್ಯ, ಗಿಡಗಂಟಿ ತೆರವು ಮತ್ತು ಕಸ ವಿಲೇವಾರಿ ನಡೆಸಬೇಕು. ಸಿ.ಸಿ. ಕ್ಯಾಮೆರಾ ಅಳವಡಿಕೆ, 24×7 ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಬೇಕು. ಅಧಿಕೃತ ವ್ಯಕ್ತಿಗಳನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಬೇಕು ಎಂದು ಸೂಚಿಸಲಾಗಿದೆ.

ಪಾರ್ಕ್ಗೆ ಸಂಪರ್ಕಿಸುವ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಅನಧಿಕೃತ ಪ್ರವೇಶ ಅಥವಾ ಅತಿಕ್ರಮಣ ಕಂಡುಬಂದಲ್ಲಿ ಎಫ್ಐಆರ್ ಅಥವಾ ಬಿಎನ್ಎಸ್ಎಸ್–2023 ಅಡಿ ಪ್ರಕರಣ ದಾಖಲಿಸಬೇಕು. ಅಲ್ಲಿರುವ ಅಮೂಲ್ಯ ವಸ್ತುಗಳು ಹಾಗೂ ನಿರ್ಮಾಣ ಸಾಮಗ್ರಿಗಳ ಸುರಕ್ಷತೆ ಖಚಿತಪಡಿಸಬೇಕು.

ಈ ಕುರಿತು ಕೈಗೊಂಡ ಕ್ರಮಗಳ ಅನುಪಾಲನಾ ವರದಿಯನ್ನು ಜನವರಿ 10ರೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಜೊತೆಗೆ ಪ್ರತಿ ವಾರ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಿಪಿಎಸ್ ಫೋಟೊಗಳೊಂದಿಗೆ ವರದಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.



