ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ, ನಗರ ಸೌಂದರ್ಯೀಕರಣ ಹಾಗೂ ರಸ್ತೆ ದುರಸ್ತಿ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಹಿಂದಿನ ಪರ್ಯಾಯ ಸಂದರ್ಭಗಳಲ್ಲಿ ನಗರದ ಪ್ರಮುಖ ರಸ್ತೆಗಳು ಡಾಂಬರೀಕರಣಗೊಂಡು, ರಸ್ತೆ ವಿಭಾಜಕ ದಂಡೆಗಳು, ಬಿಳಿ ಬಣ್ಣದ ಸಂಚಾರ ಗೆರೆಗಳು, ವಾಹನ ನಿಲುಗಡೆ ಸೂಚನೆಗಳು ಸ್ಪಷ್ಟವಾಗಿ ಮೂಡಿಬರುತ್ತಿದ್ದವು. ಜೊತೆಗೆ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಬಣ್ಣ ಬಳಿದು, ಪರ್ಯಾಯಕ್ಕೆ ಆಗಮಿಸುವ ಹೊರರಾಜ್ಯ ಹಾಗೂ ಹೊರಜಿಲ್ಲೆಯ ಯಾತ್ರಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಗುತ್ತಿತ್ತು.

ಆದರೆ ಈ ಬಾರಿ ಪರ್ಯಾಯ ಸಂಭ್ರಮ ಸಮೀಪಿಸುತ್ತಿದ್ದರೂ ನಗರ ಸೌಂದರ್ಯೀಕರಣ, ರಸ್ತೆ ದುರಸ್ತಿ, ಡಾಂಬರೀಕರಣ ಸೇರಿದಂತೆ ಯಾವುದೇ ಪ್ರಮುಖ ಕಾಮಗಾರಿಗಳು ಆರಂಭವಾಗಿಲ್ಲ. ಹಿಂದಿನ ವರ್ಷಗಳಲ್ಲಿ ಸರ್ಕಾರ ಪರ್ಯಾಯ ಮಹೋತ್ಸವಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿ ಜಿಲ್ಲಾಡಳಿತ ಹಾಗೂ ನಗರಾಡಳಿತದ ಮೂಲಕ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುತ್ತಿತ್ತು. ಈ ಬಾರಿ ಅನುದಾನ ಕೊರತೆಯೇ ಈ ಸ್ಥಿತಿಗೆ ಕಾರಣವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರು ಈ ವಿಷಯಕ್ಕೆ ಗಂಭೀರವಾಗಿ ಸ್ಪಂದಿಸಬೇಕು ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತ ಹಾಗೂ ಮಾಜಿ ನಗರಸಭಾ ಸದಸ್ಯ ನಿತ್ಯಾನಂದ ಒಳಕಾಡು ಮತ್ತು ತಾರಾನಾಥ ಮೇಸ್ತ ಶಿರೂರು ಆಗ್ರಹಿಸಿದ್ದಾರೆ. ಪರ್ಯಾಯದ ಗೌರವ ಹಾಗೂ ನಗರದ ಪ್ರತಿಷ್ಠೆಯನ್ನು ಗಮನದಲ್ಲಿಟ್ಟು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.



