ಉಡುಪಿ : ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಣಾಮಕಾರಿ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ಪ್ರಜಾಸೇವೆ ಆಂದೋಲನ’ ಮತ್ತೊಂದು ಕಾಟಾಚಾರದ ಜನಸ್ಪಂದನ ಕಾರ್ಯಕ್ರಮವಾಗಬಾರದು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅಧಿಕಾರಿಗಳಿಗೆ ಸೂಚಿಸಿದರು.

ಬೈಂದೂರು ತಾಲೂಕು ಕಚೇರಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವು ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆದರೆ, ಈ ಸಭೆಗಳಲ್ಲಿ ಇತ್ಯರ್ಥಗೊಂಡ ಅರ್ಜಿಗಳು ಹಾಗೂ ಇನ್ನೂ ಬಾಕಿ ಇರುವ ಅರ್ಜಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಬಳಿ ಸಮರ್ಪಕ ಮಾಹಿತಿ ಇಲ್ಲದಿರುವುದು ವಿಷಾದನೀಯ ಎಂದರು.

ಪ್ರಜಾಸೇವೆ ಆಂದೋಲನದ ಪೂರ್ವಭಾವಿ ಸಭೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಹೆಚ್ಚಿನ ಇಲಾಖೆಗಳ ಅಧಿಕಾರಿಗಳು ಗೈರುಹಾಜರಾಗಿರುವುದು ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆಯೇ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದು ಕಂಡುಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಒದಗಿಸುವುದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಪ್ರಜಾಸೇವೆ ಆಂದೋಲನ ಕೇವಲ ಮತ್ತೊಂದು ಜನಸ್ಪಂದನ ಕಾರ್ಯಕ್ರಮವಾಗಿ ಉಳಿಯದೆ, ಕ್ಷೇತ್ರದ ಜನಸಾಮಾನ್ಯರ ಬೇಡಿಕೆಗಳು ಹಾಗೂ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವ ವೇದಿಕೆಯಾಗಬೇಕು. ಇದಕ್ಕಾಗಿ ಎಲ್ಲ ಇಲಾಖೆಗಳು ತಮ್ಮ ಹೊಣೆಗಾರಿಕೆಯನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳ ವಿಲೇವಾರಿ, ಬಾಕಿ ಅರ್ಜಿಗಳ ಪರಿಶೀಲನೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕರು ತಿಳಿಸಿದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ, ಬೈಂದೂರು ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


