ಉಡುಪಿ : ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸನ್ಮಾನ್ಯ ಭಾರತದ ಪ್ರಧಾನಮಂತ್ರಿಯವರು ಉಡುಪಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಶಿಷ್ಠಾಚಾರವನ್ನು ಪಾಲಿಸುವ ಸಲುವಾಗಿ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರಧಾನಮಂತ್ರಿಯವರು ನವೆಂಬರ್ 28 ರಂದು ಆದಿಉಡುಪಿಯ ಹೆಲಿಪ್ಯಾಡ್ನಿಂದ ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಠನ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಕಾರ್ಯಕ್ರಮ-ಗೀತೋತ್ಸವದಲ್ಲಿ ಭಾಗವಹಿಸಲಿದ್ದು, ಭೇಟಿ ಸಂದರ್ಭದಲ್ಲಿ ಭದ್ರತೆಗೆ ಅಗತ್ಯವಿರುವ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭದ್ರತೆಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ, ರಸ್ತೆಯಲ್ಲಿ ಹಾಗೂ ಮತ್ತಿತರ ಕಡೆಗಳಲ್ಲಿ ಸಿ.ಸಿ.ಟಿವಿ ಅಳವಡಿಸಬೇಕು. ಸಚಿವರುಗಳು ಆಗಮಿಸುವ ನಿರೀಕ್ಷೆಯಿದ್ದು, ಅವರುಗಳ ಸುರಕ್ಷತೆಗೂ ಸಹ ಒತ್ತು ನೀಡಬೇಕು. ಪ್ರಧಾನಮಂತ್ರಿಗಳು ಹೆಲಿಪ್ಯಾಡ್ನಿಂದ ಕೃಷ್ಣ ಮಠಕ್ಕೆ ಚಲಿಸುವ ರಸ್ತೆಯ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸರನ್ನು ನಿಯೋಜನೆಗೊಳಿಸಬೇಕು. ಕೋಲುಗಳನ್ನೊಳಗೊಡಂತೆ ಬಾವುಟಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರಧಾನಿ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಇತರೆ ಇಲಾಖೆಗಳು ಸಮನ್ವಯದಿಂದ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕು ಎಂದ ಅವರು, ತುಳುನಾಡು ಜಾನಪದ ಕಲೆ, ಹುಲಿ ವೇಷ ಕುಣಿತ, ಯಕ್ಷಗಾನ, ಡೊಳ್ಳು ಕುಣಿತ ಸೇರಿದಂತೆ ಸಂಪ್ರದಾಯ ವಾದ್ಯಗಳ ಪ್ರದರ್ಶನ ನಡೆಯಲಿದೆ ಎಂದರು. ಸಭೆಯಲ್ಲಿ ಶಾಸಕರಾದ ಯಶ್ಪಾಲ್ ಎ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



