ಉಡುಪಿ : ಬೀದಿ ನಾಯಿಗಳಿಂದ ಸಾರ್ವಜನಿಕರಿಗೆ ಅಪಾಯ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಸರ್ವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳ ಪಾಲನೆ ಮಾಡಿ, ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಶಸ್ತ್ರ ಚಿಕಿತ್ಸೆಯ ನಂತರ ನಾಯಿಗಳನ್ನು ಅದೇ ಸ್ಥಳಕ್ಕೆ ವಾಪಾಸು ಬಿಡಬೇಕು. ರೇಬೀಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಆಶ್ರಯ ತಾಣಗಳಿಗೆ ಬಿಡಬೇಕು. ಸಹಾಯವಾಣಿ ಸ್ಥಾಪನೆ ಹಾಗೂ ಪ್ರದರ್ಶನವನ್ನು ಮಾಡಬೇಕು. ಆಶ್ರಯ ತಾಣಗಳಲ್ಲಿ ಸ್ವಚ್ಚತೆ, ಆಹಾರ, ನೀರು, ನೆರಳು,ಪಶು ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಬೇಕು ಎಂದರು.

ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಬೀದಿ ನಾಯಿಗಳ ಸಂಖ್ಯೆ 18,500 ರಷ್ಟು ಇದ್ದು, ಈಗಾಗಲೇ ನಾಯಿಗಳ ಆಶ್ರಯ ತಾಣಕ್ಕಾಗಿ ಉಡುಪಿ ನಗರ ಭಾಗದಲ್ಲಿ ಒಂದು ಎಕರೆ ಜಾಗ ಗುರುತಿಸಲಾಗಿದ್ದು, ಇಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಶೀಘ್ರದಲ್ಲೇ ಸುಸಜ್ಜಿತ ಆಶ್ರಯ ತಾಣ ಪ್ರಾರಂಭಿಸಲು ಹಾಗೂ ಮುಂದಿನ ಮೂರು ದಿನಗಳಲ್ಲಿ ತಾಲೂಕು ಮತ್ತು ನಗರ ಪ್ರದೇಶಕ್ಕೆ ಒಂದರಂತೆ ಆಶ್ರಯ ತಾಣ ನಿರ್ಮಿಸಲು ಬೇಕಾದ ಜಾಗ ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.
ಸ್ವರೂಪ ಟಿ.ಕೆ (ಜಿಲ್ಲಾಧಿಕಾರಿ)



