ಉಡುಪಿ : ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಕ್ಕಳೊಂದಿಗೆ ಸಂವೇದನಾಶೀಲವಾಗಿ ಮತ್ತು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ರೀತಿಯಲ್ಲಿ ವ್ಯವಹರಿಸಲು ಅಗತ್ಯವಾದ ಜ್ಞಾನ–ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವುದು ಅಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ ಹೇಳಿದರು.

ಅವರು ರಜತಾದ್ರಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಪಾಲನ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ರಕ್ಷಣೆಯ ಕುರಿತ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ 5,970 ಗ್ರಾಮಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದುವರೆಗೆ 26 ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಪೂರ್ಣಗೊಂಡಿದ್ದು, ಮಕ್ಕಳೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನಾ ನಿರ್ದೇಶಕಿ ಹಲಿಮಾ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಬಾಲನ್ಯಾಯ ಕಾಯ್ದೆಯ ಕುರಿತು ಸಮಗ್ರ ಮಾಹಿತಿ ಇರಬೇಕು. ಮಕ್ಕಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸುವಾಗ ಸ್ಪಷ್ಟತೆ ಅಗತ್ಯವಿದೆ. ತಮ್ಮ ಬಳಿ ಬರುವ ಮಕ್ಕಳನ್ನು ತಾತ್ಸಾರ ಮಾಡದೇ, ತಮ್ಮದೇ ಮಕ್ಕಳಿಗೆ ತೋರಿಸುವ ಪ್ರೀತಿ ಮತ್ತು ಕಾಳಜಿಯನ್ನು ಅವರಿಗೊ ಸಹ ತೋರಬೇಕು ಎಂದು ಹೇಳಿದರು. ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದು ಅದನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಪ್ರಭು ಡಿ.ಟಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅನುರಾಧಾ ಹಾದಿಮನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಭಾನುಮತಿ, ಮಕ್ಕಳ ರಕ್ಷಣಾ ಘಟಕದ ನಾಗರತ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.



