ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಅಭ್ಯುದಯ ಯ ಉದ್ಘಾಟನಾ ಸಮಾರಂಭವು ತೆಕ್ಕಟ್ಟೆಯ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ನಡೆಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮುದಾಯ ಸೇವಾ ಘಟಕದ ಮುಖ್ಯಸ್ಥೆ ಡಾ. ವಿದ್ಯಾಲಕ್ಷ್ಮೀ ಕೆ., ಶಿಬಿರಾರ್ಥಿಗಳ ಶಿಸ್ತು, ಜ್ಞಾನ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಈ ಶಿಬಿರ ಸಹಕಾರಿಯಾಗಲಿ ಎಂದು ಆಶಿಸಿದರು. ಮುಖ್ಯ ಅತಿಥಿಗಳಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಕುಮಾರ್ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕೈಲಾಸ ಕಲಾ ಸಂಘದ ಅಧ್ಯಕ್ಷ ಹೆರಿಯಾ ಮಾಸ್ಟರ್ ಶಿಬಿರಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

ಅಸೋಸಿಯೇಟ್ ಡೀನ್ ಸುಬ್ರಹ್ಮಣ್ಯ ಭಟ್ಟ್ ಪರೋಪಕಾರವೇ ಪರಮ ಧರ್ಮ ಎಂಬ ಸಂದೇಶದೊಂದಿಗೆ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಿಬಿರದ ಯೋಜನಾಧಿಕಾರಿ ಡಾ. ಶ್ರೀನಿಧಿ ಧನ್ಯ ಬಿ.ಎಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯುವ ರೆಡ್ ಕ್ರಾಸ್ ಹಾಗೂ ಎನ್ಎಸ್ಎಸ್ ಸಹಯೋಜನಾಧಿಕಾರಿಗಳು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಏಳು ದಿನಗಳ ಈ ಶಿಬಿರವು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.



