ಉಡುಪಿ : ಮನೆ ಮಾಲೀಕರು ನಿದ್ರಿಸುತ್ತಿದ್ದ ವೇಳೆ ಕಿಟಕಿ ಮುರಿದು ಮನೆಗೆ ನುಗ್ಗಿದ ಕಳ್ಳರು ಚಿನ್ನ, ಬೆಳ್ಳಿ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ಹೆಬ್ರಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೆಬ್ರಿ ಗ್ರಾಮ ನಿವಾಸಿ ಕೀರ್ತನ ಪ್ರಭು (34), ಮೇ 24ರಂದು ಬೆಳಿಗ್ಗೆ ಸುಮಾರು 6.45ಕ್ಕೆ ಎದ್ದು ನೋಡಿದಾಗ ಮನೆಯ ಹಿಂಭಾಗ ಹಾಗೂ ಮುಂಭಾಗದ ಬಾಗಿಲುಗಳು ತೆರೆದಿರುವುದು ಗಮನಕ್ಕೆ ಬಂದಿದೆ. ಹಾಲ್ನಲ್ಲಿದ್ದ ಗಾಡ್ರೆಜ್ ಬಾಗಿಲು ಸಹ ತೆರೆದಿರುವುದನ್ನು ಕಂಡು ಅನುಮಾನಗೊಂಡ ಅವರು ಮನೆಯ ಮೊದಲ ಮಹಡಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಲಗುವ ಕೋಣೆಯಲ್ಲಿದ್ದ ಕಬ್ಬಿಣದ ಗಾಡ್ರೆಜ್ ಲಾಕರ್ ತೆರೆಯಲ್ಪಟ್ಟಿದ್ದು, ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳರು ಮನೆಯ ಹಿಂಭಾಗದ ಕಿಟಕಿಯ ಚಿಲಕದ ಕೊಂಡಿಯನ್ನು ಮೀಟಿ ಒಳನುಗ್ಗಿ, ಮೊದಲ ಮಹಡಿಯಲ್ಲಿ ಇರಿಸಲಾಗಿದ್ದ ಚಿನ್ನಾಭರಣ, ಬೆಳ್ಳಿ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಪತ್ತೆಯಾಗಿದೆ..

ಸುಮಾರು ರೂ 59.97 ಲಕ್ಷ ಮೌಲ್ಯದ ವಸ್ತುಗಳು ಕಳವಾಗಿರುವುದಾಗಿ ಕೀರ್ತನ ಪ್ರಭು ದೂರು ನೀಡಿದ್ದಾರೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.



