ಬೈಂದೂರು: ಬೈಂದೂರಿನ ಸೌಂದರ್ಯವನ್ನು ಇಮ್ಮಡಿಗೊಳಿಸುವಂತೆ ಸುಮಾರು ರೂಪಾಯಿ 8.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೈಂದೂರು ಬಸ್ ನಿಲ್ದಾಣ ಕಾಮಗಾರಿಯ ಪ್ರಗತಿಯ ಬಗ್ಗೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಪ್ರಸ್ತುತ ಬಸ್ ನಿಲ್ದಾಣ ಕಾಮಗಾರಿಯು ಶೇಕಡಾ 80 ರಷ್ಟು ಪೂರ್ಣಗೊಂಡಿದ್ದು ಶೀಘ್ರವಾಗಿ ಕಾಮಗಾರಿ ಮುಗಿಸಿ ಫೆಬ್ರವರಿ 20 ನೇ ತಾರೀಕಿನ ಒಳಗಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಲು ಅಗತ್ಯ ಕ್ರಮ ವಹಿಸಲು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಬಸ್ ನಿಲ್ದಾಣಕ್ಕೆ ನೀರಿನ ಸೌಕರ್ಯ ಒದಗಿಸಲು ಕ್ರಮ ವಹಿಸುವುದು, ಬಸ್ ನಿಲ್ದಾಣದ ಮುಂಭಾಗದಲ್ಲಿ ಬಸ್ಸುಗಳ ಆಗಮನ ಹಾಗೂ ನಿರ್ಗಮನಕ್ಕೆ ಅನುಕೂಲವಾಗುವಂತೆ ರಸ್ತೆ ವಿಭಜಕವನ್ನು ತೆರವುಗೊಳಿಸಲು ರಾಷ್ಟೀಯ ಹೆದ್ದಾರಿ ಇಲಾಖೆಗೆ ಗಂಟಿಹೊಳೆ ಅವರು ಫೋನ್ ಕರೆಯ ಮೂಲಕ ಮೌಖಿಕ ಸೂಚನೆ ನೀಡಿದರು.