ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಪದವಿ ವಿದ್ಯಾರ್ಥಿಗಳ ಒಂದು ದಿನದ ಶೈಕ್ಷಣಿಕ ಮಾರ್ಗದರ್ಶನ ಸಮಾವೇಶವು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿತು. ಅದಮಾರು ಶಿಕ್ಷಣ ಸಂಸ್ಥೆಗಳ ಗೌರವ ಆಡಳಿತಾಧಿಕರಿಗಳಾದ ಡಾ. ಎ. ಪಿ. ಭಟ್ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಸನ್ನಡತೆಯನ್ನು ಮೈಗೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಹಿರಿಯ ಉದ್ಯಮಿ ಮಡಾಮಕ್ಕಿ ಶಶಿಧರ ಶೆಟ್ಟಿಯವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ್ದರು. ಸಿಎ ಅರುಣ್ ನಾಯಕ್ ಅವರು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. ಹುಬ್ಬಳ್ಳಿಯ ಮೈಲೈಫ್ನ ಸಂಸ್ಥಾಪಕ ಪ್ರವೀಣ್ ಗುಡಿಯವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರೊ. ಕೆ. ಸದಾಶಿವ ರಾವ್, ನಾರಾಯಣ ಎಂ. ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ವಿ. ಜಿ. ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಸಂಜೆ ನಡೆದ ಸಮಾರೋಪದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಸದಸ್ಯರಾದ ದಿನೇಶ್ ಪಿ. ಪೂಜಾರಿ, ಕಿಶೋರ್ ಸಿ. ಉದ್ಯಾವರ ಭಾಗವಹಿಸಿದ್ದರು. 240 ವಿದ್ಯಾರ್ಥಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.



