ಉಡುಪಿ : ನಾನು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷನಾಗಲು ಬಯಸಿದ್ದ ಉದ್ದೇಶ ಇಷ್ಟೇ, ಅಕಾಡೆಮಿ ಕೊಡುವ ಸೌಲಭ್ಯಗಳು ಕಲೆ, ಕಲಾವಿದರನ್ನು ಮುಟ್ಟಬೇಕು ಎನ್ನುವುದು. ಹೀಗಾಗಿ ಯಕ್ಷಗಾನಕ್ಕೆ ಸಂಬoಧಿಸಿದ ಕಾರ್ಯಕ್ರಮಗಳಿಗೆ ಸಹಕಾರ ಕೋರಿ ಬರುವ ಸಂಘಸoಸ್ಥೆಗಳನ್ನು ಬೆಂಬಲಿಸುವ ಕಾರ್ಯ ಮಾಡುತ್ತಿದ್ದೇನೆ. ಯಕ್ಷಗಾನ ಉಳಿಸುವುದು ಕೇವಲ ಅಕಾಡೆಮಿಯ ಕೆಲಸವಲ್ಲ, ಯಕ್ಷಗಾನದಲ್ಲಿ ತೊಡಗಿಸಿಕೊಂಡಿರುವ ಸಂಘ ಸಂಸ್ಥೆಗಳು ಅಕಾಡೆಮಿ ಜೊತೆಗೆ ಕೈ ಜೋಡಿಸಬೇಕು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ

ಅವರು ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಸುಮನಸಾ ಕೊಡವೂರು – ಉಡುಪಿ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಹಮ್ಮಿಕೊಂಡ ಒಂದು ತಿಂಗಳ ‘ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರ’ದ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಕ್ಷಗಾನ ಕಲೆಗೆ ಅದ್ಭುತ ಶಕ್ತಿಯಿದೆ. ಅದು ಅಬಾಲವೃದ್ಧರನ್ನು ಕುಣಿಸುವ ಶಕ್ತಿಯನ್ನು ಹೊಂದಿದೆ. ಯಕ್ಷಗಾನವನ್ನು ಕಲಿತವರು ಆರೋಗ್ಯ, ಜೀವನೋತ್ಸಾಹದಿಂದ ಬದುಕುತ್ತಾರೆ. ಬನ್ನಂಜೆ ಸಂಜೀವ ಸುವರ್ಣ ಅವರಂತಹ ಅದ್ಭುತ ಗುರು ನಮ್ಮಲ್ಲಿರುವುದು ನಮ್ಮ ಸೌಭಾಗ್ಯ, ಅವರಲ್ಲಿರುವ ಯಕ್ಷಗಾನ ಪಾಂಡಿತ್ಯವನ್ನು ಮುಂದಿನ ಪೀಳಿಗೆಗೆ ಮುಟ್ಟಿಸುವ ಕಾರ್ಯ ನಡೆಯಬೇಕು ಎನ್ನುವ ಉದ್ದೇಶದಿಂದ ಅಕಾಡೆಮಿ ಅವರ ಬಗ್ಗೆ ದಾಖಲೀಕರಣ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ, ಉದ್ಯಮಿ ಗೋಪಾಲ ಸಿ. ಬಂಗೇರ, ಸಂಗೀತ ವಿದ್ವಾನ್ ಪಾಡಿಗಾರ್ ಲಕ್ಷ್ಮೀ ನಾರಾಯಣ ಉಪಾಧ್ಯ ತರಬೇತುದಾರ ಮನೋಜ್ ಉಪಸ್ಥಿತರಿದ್ದರು. ಸುಮನಸಾ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿ, ಗೌರವಾಧ್ಯಕ್ಷರಾದ ಎಂ.ಎಸ್. ಭಟ್ ವಂದಿಸಿದರು. ಕಾರ್ಯದರ್ಶಿ ಚಂದ್ರಕಾoತ್ ಕುಂದರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಿಬಿರದ ಪ್ರಾತ್ಯಕ್ಷಿಕೆ ಹಾಗೂ ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಿತು.


