Wednesday, October 22, 2025

spot_img

2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ” : ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾ ಆಯ್ಕೆ

ಉಡುಪಿ : ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ–ಕರ್ನಾಟಕ ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಡಾ. ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಅವರ ಪ್ರಮುಖ ಕೃತಿಗಳು: ಇಂಡಿಯಾ ಆಫ್ಟರ್‌ ಗಾಂಧಿ (ಸ್ವಾತಂತ್ರ್ಯಾನಂತರ ಭಾರತದ ಇತಿಹಾಸ), ಎ ಕಾರ್ನರ್‌ ಆಫ್‌ ಅ ಫಾರಿನ್‌ ಫೀಲ್ಡ್‌ (ಭಾರತೀಯ ಕ್ರಿಕೆಟ್‌ನ ಸಾಮಾಜಿಕ ಇತಿಹಾಸ), ಗಾಂಧಿ ಬಿಪೋರ್‌ ಇಂಡಿಯಾ (ಮಹಾತ್ಮ ಗಾಂಧೀಜಿಯವರ ಜೀವನಚರಿತ್ರೆಯ ಮೊದಲ ಭಾಗ), ಗಾಂಧಿ:ದಿ ಇಯರ್‌ ದಟ್‌ ಚೇಂಜ್ಡ್‌ ದಿ ವಲ್ಡ್‌ (ಜೀವನಚರಿತ್ರೆಯ ಎರಡನೇ ಭಾಗ), ದಿ ಅನ್ಕ್ವಿಟ್‌ ವುಡ್ಸ್‌ (ತಳಸ್ಥರದ ಪರಿಸರ ಚಳವಳಿಗಳ ಅಧ್ಯಯನ) ಈ ಕೃತಿಗಳು ಇತಿಹಾಸ ಅಧ್ಯಯನವನ್ನು ಶ್ರೀಮಂತಗೊಳಿಸುವುದಷ್ಟೇ ಅಲ್ಲದೆ, ಸಾಮಾನ್ಯ ಓದುಗರಿಗೂ ಸುಲಭವಾಗಿ ತಲುಪುವ ಶೈಲಿಯಲ್ಲಿ ಬರೆದಿರುವುದರಿಂದ ಸಮಾಜದಲ್ಲಿ ಚಿಂತನ–ಮನನಕ್ಕೆ ಪ್ರೇರಣೆಯಾಗಿವೆ. ವಿಶೇಷವಾಗಿ ಗಾಂಧೀ ತತ್ವಗಳನ್ನು ಆಳವಾಗಿ ವಿಶ್ಲೇಷಿಸಿ ಅವನ್ನು ಸಮಕಾಲೀನ ಭಾರತಕ್ಕೆ ಸಂಬಂಧಿಸಿದಂತೆ ಅರ್ಥೈಸುವಲ್ಲಿ ಡಾ. ಗುಹಾ ಅವರಿಗೆ ಒಂದು ವಿಶಿಷ್ಟ ಸ್ಥಾನವಿದೆ. ಅವರ ಗಾಂಧೀಜಿಯವರ ಎರಡು ಸಂಪುಟಗಳ ಜೀವನಚರಿತ್ರೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಗೆ ಅನುವಾದಗೊಂಡಿದೆ.

ರಾಜ್ಯ ಸರ್ಕಾರವು ಈ ಪ್ರಶಸ್ತಿಯ ಮೂಲಕ ಯುವ ಪೀಳಿಗೆಗೆ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಿ, ಸತ್ಯ, ಅಹಿಂಸೆ, ಶಾಂತಿ ಮತ್ತು ಸೇವಾ ಮನೋಭಾವನೆಗಳನ್ನು ಬಲಪಡಿಸಲು ಬದ್ಧವಾಗಿದೆ. ಡಾ. ರಾಮಚಂದ್ರ ಗುಹಾ ಅವರಿಗೆ ಈ ಪ್ರಶಸ್ತಿ ಪ್ರದಾನವಾಗುವುದು, ಸಮಾಜದಲ್ಲಿ ಗಾಂಧೀಜಿಯವರ ಆದರ್ಶಗಳ ಪ್ರಚುರತೆ, ಸಂವಾದ ಮತ್ತು ಅಧ್ಯಯನಕ್ಕೆ ಪ್ರೇರಣೆಯಾದಂತಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles