ಉಡುಪಿ: ಬ್ರಹ್ಮಾವರ, ಕೋಟ, ಪಡುಬಿದ್ರಿ ಮತ್ತು ಮುಲ್ಕಿ ಪ್ರದೇಶಗಳಲ್ಲಿ ಸರ್ವಿಸ್ ರಸ್ತೆ ಹಾಗೂ ಪ್ಲೈಓವರ್ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಏಜೆನ್ಸಿ ನೇಮಕಗೊಂಡಿದ್ದಾಗಿ ರಾಷ್ಟ್ರೀಯ ಹೆದ್ದಾರಿ–66 ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಗೋವಿಂದರಾಜ್ ಹೆಗ್ಡೆ ತಿಳಿಸಿದ್ದಾರೆ. ಅವರು ಬ್ರಹ್ಮಾವರದ ಹೋಟೆಲ್ ಆಶ್ರಯದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಡಿಸೆಂಬರ್ 2ರಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೋರಾಟ ಸಮಿತಿಯ ಬೇಡಿಕೆಗಳನ್ನು ವಿವರವಾಗಿ ಮಂಡಿಸಲಾಗಿದ್ದು, ಸಂಸದರು ಹಾಗೂ ಅಧಿಕಾರಿಗಳು ಅದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದರು.

ಬ್ರಹ್ಮಾವರದಲ್ಲಿ 7 ಪಿಲ್ಲರ್ಗಳ ಪ್ಲೈಓವರ್, ಭದ್ರಗಿರಿಯಂದಿಂದ ಮಾಬುಕಳ ಸೇತುವೆತನಕ ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ದೂಪದಕಟ್ಟೆ, ಆಕಾಶವಾಣಿ ಬೈಪಾಸ್, ಉಪ್ಪಿನಕೋಟೆಯಲ್ಲಿ ಮೀಡಿಯನ್ ಓಪನಿಂಗ್. ಈ ಬೇಡಿಕೆಗಳ ಪರವಾಗಿ ಡಿಸೆಂಬರ್ 4ರಂದು ಬ್ರಹ್ಮಾವರ ಬಂದ್ ಹಾಗೂ ಶ್ರಮದಾನದ ಮೂಲಕ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದರೂ, ಸಂಸದರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟವನ್ನು ಮುಂದೂಡಲಾಗಿತ್ತು ಎಂದರು. ಸಭೆಯ ನಂತರ ಕೇಂದ್ರ ಸಾರಿಗೆ ಸಚಿವರ ಸೂಚನೆ ಮೇರೆಗೆ, ಡಿಪಿಆರ್ ತಯಾರಿಕೆಗೆ ಮೆಸ್ಸರ್ಸ್ ದ್ರುವ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯನ್ನು ನೇಮಿಸಲಾಗಿದೆ. ಇಂಜಿನಿಯರ್ಗಳು 15 ದಿನಗಳೊಳಗೆ ಸ್ಥಳಕ್ಕೆ ಆಗಮಿಸಿ ಕೋಟ, ಬ್ರಹ್ಮಾವರ, ಪಡುಬಿದ್ರಿ ಮತ್ತು ಮುಲ್ಕಿಯಲ್ಲಿ ಡಿಪಿಆರ್ ಸಿದ್ಧಪಡಿಸಲಿದ್ದಾರೆ. ಈ ಸಂದರ್ಭದಲ್ಲಿ ಹೋರಾಟ ಸಮಿತಿ ವತಿಯಿಂದ ಅಗತ್ಯ ಮಾಹಿತಿ ಒದಗಿಸಲಾಗುವುದು ಎಂದು ಹೆಗ್ಡೆ ಹೇಳಿದರು.

ಸಭೆಯಲ್ಲಿ ಮಾತನಾಡಿದ ಆಶ್ರಯ ಹೋಟೆಲ್ ಮಾಲಕ ರಾಜಾರಾಮ ಶೆಟ್ಟಿ, ಬ್ರಹ್ಮಾವರದಲ್ಲಿ ನಡೆಯುತ್ತಿರುವ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದರಿಂದ ವ್ಯವಹಾರ ವಲಯ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಕ್ಷಣ ಕ್ರಮಕೈದು ಕಾಮಗಾರಿಯನ್ನು ವೇಗಗೊಳಿಸಬೇಕು ಎಂದು ಒತ್ತಾಯಿಸಿದರು.ಪತ್ರಿಕಾಗೋಷ್ಟಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ದೇವಕಿ ಪೂಜಾರ್ತಿ, ನಿರಂಜನ ಶೆಟ್ಟಿ, ಹಾರಾಡಿ ದಯಾನಂದ ಶೆಟ್ಟಿ, ಬಸ್ ಮಾಲಕರ ಸಂಘದ ವಸಂತ ಶೆಟ್ಟಿ, ಕಾರು ಚಾಲಕ-ಮಾಲಕರ ಸಂಘದ ರಮೇಶ್, ರಿಕ್ಷಾ ಚಾಲಕ-ಮಾಲಕರ ಸಂಘದ ರಾಜು ಪೂಜಾರಿ, ರಾಜು ಸಾಲ್ಯಾನ್, ಟೆಂಪೋ ಮಾಲಕರ ಸಂಘದ ವಿಜಯ್ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



