ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ಬೇಣ್ಗೇರೆ ಪ್ರದೇಶದಲ್ಲಿ ಕಾಣೆಯಾದ ಸುಮಾರು 10 ವರ್ಷದ ಅಪ್ರಾಪ್ತ ಬಾಲಕ ಸಮೃದ್ಧನನ್ನು ಪೊಲೀಸರು ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ.

ಗುಜ್ಜಾಡಿ ಕಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾದ ಸಮೃದ್ಧ, ಜ.07ರಂದು ಸಂಜೆ ಶಾಲೆಯಿಂದ ಮನೆಗೆ ಬಂದ ಬಳಿಕ ಬೇಣ್ಗೇರೆ ನಾಗ ದೇವಸ್ಥಾನದ ಬಳಿ ಮಕ್ಕಳೊಂದಿಗೆ ಆಟವಾಡಲು ಹೋಗಿದ್ದ. ಸಂಜೆ 7 ಗಂಟೆಯಾದರೂ ಮನೆಗೆ ಮರಳದೇ ಇದ್ದ ಹಿನ್ನೆಲೆಯಲ್ಲಿ ಆತನ ಮಾವ ವಸಂತ ಪೂಜಾರಿ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್ ಅವರ ನೇತೃತ್ವದಲ್ಲಿ ಪೊಲೀಸರು ಮತ್ತು ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯ ನಡೆಸಿದರು. ಬಾಲಕನನ್ನು ಮನೆಯಿನಿಂದ ಸುಮಾರು 250 ಮೀಟರ್ ದೂರದಲ್ಲಿರುವ ಬಂಡೆ ಕಲ್ಲಿನ ಕೆಳಗಿನ ಪೊಟರೆಯಲ್ಲಿ ಮಲಗಿಕೊಂಡಿರುವ ಸ್ಥಿತಿಯಲ್ಲಿ ಪತ್ತೆ ಹಚ್ಚಿ, ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಲಾಗಿದೆ. ಪೊಲೀಸರ ತ್ವರಿತ ಕಾರ್ಯಾಚರಣೆಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.



