ಉಡುಪಿ: ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಸಂಚಾರ ಪೊಲೀಸ್ ಠಾಣೆ ಹಾಗೂ ಪೂರ್ಣ ಪ್ರಜ್ಞ ಪಿ.ಯು. ಕಾಲೇಜು ಇವರ ಸಹಯೋಗದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ – ಜನವರಿ 2026 ಪ್ರಯುಕ್ತ ರಸ್ತೆ ಸುರಕ್ಷತೆ – ಜೀವನ ರಕ್ಷೆ ಘೋಷವಾಕ್ಯದಡಿ ರಸ್ತೆ ಸುರಕ್ಷತಾ ಜಾಥವನ್ನು ಆಯೋಜಿಸಲಾಯಿತು.

ಪೂರ್ಣ ಪ್ರಜ್ಞ ಕಾಲೇಜಿನ ಸುಮಾರು 500 ವಿದ್ಯಾರ್ಥಿಗಳು, ಉಡುಪಿ ಸಂಚಾರ ಠಾಣೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಉಡುಪಿ ಸರ್ವೀಸ್ ಬಸ್ ಚಾಲಕರು–ನಿರ್ವಾಹಕರು ಭಾಗವಹಿಸಿ, ಉಡುಪಿ ಸರ್ವೀಸ್ ಬಸ್ ನಿಲ್ದಾಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಕಾಲ್ನಡಿಗೆ ಜಾಥ ನಡೆಸಿ ಪೂರ್ಣ ಪ್ರಜ್ಞ ಕಾಲೇಜಿನವರೆಗೆ ಘೋಷಣೆಗಳೊಂದಿಗೆ ಸಾಗಿದರು. ಜಾಥಕ್ಕೆ ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹೂ ಹಾಕುವ ಮೂಲಕ ಚಾಲನೆ ನೀಡಿದರು.

ನಂತರ ಪೂರ್ಣ ಪ್ರಜ್ಞ ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ರಸ್ತೆ ಸುರಕ್ಷತಾ ಸಭೆಯನ್ನು ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಮನು ಪಟೇಲ್ ಉದ್ಘಾಟಿಸಿ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಪ್ರಸ್ತಾವಿಕ ನುಡಿಯನ್ನು ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನುಡಿದರು. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅನಿಲ್ ಕುಮಾರ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 750 ಮಂದಿ ಭಾಗವಹಿಸಿದ್ದರು.



