ಉಡುಪಿ: ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಡೆಯಲಿರುವ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮ ಆರಂಭವಾಗಲಿದೆ. ಮೊದಲಿಗೆ ದೇಶಭಕ್ತಿಗೀತೆ, ಬಳಿಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಗುವುದು. ಬೆಳಗ್ಗೆ 9 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ನಂತರ ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪದೋಷಗಳು ಉಂಟಾಗದಂತೆ ಎಚ್ಚರ ವಹಿಸಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



