ಉಡುಪಿ: ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಉಡುಪಿಯ ಪ್ರಸಿದ್ಧ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.

ಮಠಕ್ಕೆ ಆಗಮಿಸಿದ ನ್ಯಾಯಮೂರ್ತಿಯನ್ನು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆತ್ಮೀಯವಾಗಿ ಬರಮಾಡಿಕೊಂಡರು. ಕನಕನ ಕಿಂಡಿ ಮೂಲಕ ಶ್ರೀಕೃಷ್ಣ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಬಳಿಕ ಅವರು ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು. ಈ ವೇಳೆ ಮಠದ ಪರಂಪರೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ವಿನಿಮಯ ನಡೆಯಿತು.


ಭೇಟಿಯ ಅಂಗವಾಗಿ ಮಠದ ವಿವಿಧ ಭಾಗಗಳನ್ನು ವೀಕ್ಷಿಸಿದ ಉಪ ಲೋಕಾಯುಕ್ತರು, ಮಠದ ಶಿಸ್ತಿನ ವ್ಯವಸ್ಥೆ ಹಾಗೂ ಭಕ್ತರಿಗಾಗಿ ಕಲ್ಪಿಸಿರುವ ಸೌಲಭ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಸೇರಿದಂತೆ ಮಠದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.



