ಉಡುಪಿ : ಉಡುಪಿ ಜಿಲ್ಲೆಯ ಕೋಟ ಸಮೀಪದ ಸಾಲಿಗ್ರಾಮದ ವಿಶ್ವಕರ್ಮ ಹಾಲ್ ಹತ್ತಿರದ ತೋಟವೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಅತ್ಯಂತ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಸುಮಾರು 30 ಅಡಿ ಆಳವಿರುವ ಬಾವಿಯಿಂದ ತೀವ್ರ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಕಾರ್ಮಿಕರು ಈ ವಿಷಯವನ್ನು ಗಮನಕ್ಕೆ ತಂದಿದ್ದು, ಘಟನೆ ಬೆಳಕಿಗೆ ಬಂದಿದೆ.

ರಾಷ್ಟ್ರೀಯ ಹೆದ್ದಾರಿ–66ರ ಸರ್ವಿಸ್ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯುತ್ತಿತ್ತು. ಈ ವೇಳೆ ತೋಟದ ಸಮೀಪ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಬಾವಿಯ ದಿಕ್ಕಿನಿಂದ ಅಸಹನೀಯ ದುರ್ವಾಸನೆ ಬರುತ್ತಿರುವುದು ಕಂಡುಬಂದಿದೆ. ಸಂಶಯಗೊಂಡ ಅವರು ಬಾವಿಯೊಳಗೆ ನೋಡಿದಾಗ ಶವವು ಸಂಪೂರ್ಣವಾಗಿ ಕೊಳೆತು ಅರ್ಧ ಅಸ್ಥಿಪಂಜರದ ಸ್ಥಿತಿಯಲ್ಲಿ ಇರುವುದನ್ನು ಕಂಡು ತಕ್ಷಣ ಕೋಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಶವವು ಸುಮಾರು ಎರಡು ತಿಂಗಳಷ್ಟು ಹಳೆಯದಾಗಿರಬಹುದು ಎಂದು ಶಂಕಿಸಲಾಗಿದೆ. ಸಂಪೂರ್ಣವಾಗಿ ಕೊಳೆತಿರುವುದರಿಂದ ಬಾವಿಯಿಂದ ತೀವ್ರ ದುರ್ವಾಸನೆ ಹೊರಬರುತ್ತಿತ್ತು.

ಈ ವೇಳೆ ಸ್ಥಳೀಯ ಸಮಾಜಸೇವಕರೊಬ್ಬರು ಧೈರ್ಯದಿಂದ ಸುಮಾರು 30 ಅಡಿ ಆಳದ ಬಾವಿಗೆ ಇಳಿದು ಶವವನ್ನು ಮೇಲಕ್ಕೆ ತರುವಲ್ಲಿ ಯಶಸ್ವಿಯಾದರು. ಈ ಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸಹಕರಿಸಿದರು. ಮೇಲ್ನೋಟಕ್ಕೆ ಇದು ಪುರುಷನ ಶವವಾಗಿರುವುದು ತಿಳಿದುಬಂದಿದ್ದು, ಮರಣೋತ್ತರ ಪರೀಕ್ಷೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಶವವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



