ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಮನೆ ಮನೆಗೆ ಕಾಣಿಕೆ ಡಬ್ಬಿ ವಿತರಣೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನದ ವಠಾರದಲ್ಲಿ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಊರಿನ ಭಕ್ತರಿಗೆ ಸಾಂಕೇತಿಕವಾಗಿ ಕಾಣಿಕೆ ಡಬ್ಬಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಜಿ. ಶಂಕರ್ ಅವರು, ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಗ್ರಾಮಸ್ಥರು ಮತ್ತು ಭಕ್ತರ ಸಹಕಾರದಿಂದ ಯಶಸ್ವಿಯಾಗಿ ನೆರವೇರಬೇಕು. ದೇವಸ್ಥಾನದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ ಸಹಕರಿಸಬೇಕು ಎಂದು ಕರೆ ನೀಡಿದರು.

ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಭಗವದ್ಭಕ್ತರ ಸಹಕಾರದಿಂದ ಬ್ರಹ್ಮಕಲಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವಂತೆ ಎಲ್ಲರೂ ಒಗ್ಗೂಡಿ ಶ್ರಮಿಸಬೇಕು. ಇಂತಹ ಪುಣ್ಯ ಕಾರ್ಯಗಳಲ್ಲಿ ಸಮಾಜದ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಕರುಣಾಕರ್ ಪೂಜಾರಿ, ಮಾಜಿ ನಗರಸಭಾ ಸದಸ್ಯ ಪಿ.ಜಿ. ಹೆಗ್ಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



