ಉಡುಪಿ : ಸಿರಿಧಾನ್ಯಗಳಲ್ಲಿ ನಾರಿನಾಂಶ ಮತ್ತು ಕಬ್ಬಿಣಾಂಶಗಳು ಸಮೃದ್ಧವಾಗಿರುವುದರಿಂದ ಅವು ಪೋಷಕಾಂಶಗಳ ಭಂಡಾರವಾಗಿವೆ. ದೈನಂದಿನ ಆಹಾರದಲ್ಲಿ ಸಿರಿಧಾನ್ಯಗಳನ್ನು ಸೇರಿಸುವುದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ ತಿಳಿಸಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ–ಎಣ್ಣೆಕಾಳು ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಠಿಕ ಅಭಿಯಾನ ಅಡಿಯಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕಾರ್ಯಾಗಾರ ಮತ್ತು ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕೃಷಿ ಪ್ರಧಾನ ದೇಶವಾಗಿದ್ದರೂ ಜಿ.ಡಿ.ಪಿ ಯಲ್ಲಿ ಕೃಷಿಯ ಕೊಡುಗೆ ಕಡಿಮೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ದೇಶದ ಒಟ್ಟು ಜಿ.ಡಿ.ಪಿ ಯಲ್ಲಿ ಕೃಷಿಯಿಂದ ಕೇವಲ 45-50 ಲಕ್ಷ ಕೋಟಿ ರೂಪಾಯಿಗಳಷ್ಟೇ ಕೊಡುಗೆ ಇದೆ ಎಂದು ಹೇಳಿದ ಅವರು, ಕೈಗಾರಿಕಾ ಮತ್ತು ಸೇವಾ ವಲಯಗಳಂತೆ ಕೃಷಿ ವಲಯವೂ ಬೆಳೆಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಬಳಕೆ, ಪೌಷ್ಠಿಕತೆ ಮತ್ತು ದೇಸಿ ತಳಿಗಳ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶದಿಂದ ವಸ್ತು ಪ್ರದರ್ಶನ, ಉತ್ಪನ್ನಗಳ ಮಾರಾಟ ಮತ್ತು ಮಾಹಿತಿ ಹಂಚಿಕೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಪ್ರದೀಪ್ ಹೆಬ್ಬಾರ್, ಪ್ರಗತಿಪರ ರೈತ ಹಾಗೂ ಬ್ರಹ್ಮಾವರ ರೈತಧ್ವನಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಬೈಂದೂರು ಕೃಷಿಕ ಸಮಾಜದ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಖಾದ್ಯ ತೈಲ ಸ್ವಾವಲಂಬನೆಗೆ ಸಂಬಂಧಿಸಿದ ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡಲಾಗಿದ್ದು, ಕೃಷಿಯಲ್ಲಿ ಸಾಧನೆ ಮಾಡಿದ ರೈತರು, ರೈತ ಮಹಿಳೆಯರು ಮತ್ತು ಪಾಕ ಸ್ಪರ್ಧೆಯ ವಿಜೇತರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಕೃಷಿ ಉತ್ಪನ್ನಗಳ ಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಾಯಿತು. ಕೃಷಿ ಇಲಾಖೆಯ ಅಧಿಕಾರಿಗಳು, ರೈತರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.



