ಉಡುಪಿ: ನಾರಿ ಶಕ್ತಿ ಮಸೂದೆ 2026 ಮಹಿಳೆಯರಿಗೆ ನ್ಯಾಯಯುತ ಪ್ರಾತಿನಿಧ್ಯ ನೀಡುವ ಮಹತ್ವದ ಮಸೂದೆ ಆಗಿದ್ದು, ಇದನ್ನು ಸರ್ವಾನುಮತದಿಂದ ಅಂಗೀಕರಿಸುವ ನಿರೀಕ್ಷೆ ಇತ್ತು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷಗಳು ದ್ವೇಷಪೂರ್ಣವಾಗಿ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವುದು ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಮಹಿಳೆಯರಿಗೆ ಸಮಾನ ಹಕ್ಕು ನೀಡುವ ಸುವರ್ಣ ಅವಕಾಶ ತಪ್ಪಿಹೋಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ಮಾತನಾಡಿದ ಅವರು, ಕೆಲವು ಕ್ಷೇತ್ರಗಳಲ್ಲಿ 28 ರಿಂದ 33 ಲಕ್ಷ ಜನಸಂಖ್ಯೆ ಇರುವುದರಿಂದ ಜನರನ್ನು ತಲುಪುವುದು ಕಷ್ಟವಾಗುತ್ತಿದೆ. ಆದ್ದರಿಂದ ಕ್ಷೇತ್ರಗಳನ್ನು ಸಣ್ಣದಾಗಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ 33 ಶೇಕಡ ಮಹಿಳಾ ಮೀಸಲಾತಿ ಜಾರಿಗೊಳಿಸುವುದು ಅನಿವಾರ್ಯ ಎಂದರು.

ಕರ್ನಾಟಕದಲ್ಲಿ ಜನಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಹೆಚ್ಚುವರಿ ಸ್ಥಾನಗಳ ಅಗತ್ಯವಿದೆ. ಆದರೆ ವಿಪಕ್ಷಗಳು ಎಲ್ಲಾ ಅವಕಾಶಗಳಿಗೂ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಆರೋಪಿಸಿದರು. ಮಸೂದೆ ಜಾರಿಗೆ ಚುನಾವಣೆಯೊಂದಿಗೆ ಯಾವುದೇ ಸಂಬಂಧ ಇಲ್ಲ. ಮುಂದಿನ ದಿನಗಳಲ್ಲಿ ಈ ಮಸೂದೆ ಜಾರಿಗೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳ ಚುನಾವಣೆಯನ್ನು ಉಲ್ಲೇಖಿಸಿದ ಅವರು, ಅಲ್ಲಿ ಎನ್ಡಿಎ ಒಕ್ಕೂಟ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ಬೆಂಬಲಿಗರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಿದರು. ರಾಷ್ಟ್ರಪ್ರೇಮದ ಮನೋಭಾವದಿಂದ ಜನರು ಪ್ರಧಾನಿ ನರೇಂದ್ರ ಮೋದಿಯನ್ನು ಬೆಂಬಲಿಸುತ್ತಾರೆ ಎಂದರು. ಈ ಸಂದರ್ಭ ಮಹಿಳಾ ಮುಖಂಡರಾದ ಶ್ಯಾಮಲಾ ಕುಂದರ್, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಸಂಧ್ಯಾ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.



