ಉಡುಪಿ : ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ವತಿಯಿಂದ 2025-26ನೇ ಸಾಲಿನ ವಿಶೇಷ ಶಿಬಿರವು ಬ್ರಹ್ಮಾವರ ತಾಲೂಕಿನ ಗೋಳಿಯಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಆರಂಭಗೊಂಡಿತು.

ಕಾರ್ಯಕ್ರಮವನ್ನು ಬೆಳ್ವೆಯ ರಾಧಿಕಾ ಕ್ಯಾಶ್ಯೂಸ್ ಸಂಸ್ಥೆಯ ಉದ್ಯಮಿ ರಾಜೇಂದ್ರ ಕಿಣಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಬೇಕು. ಎನ್ಎಸ್ಎಸ್ ಶಿಬಿರಗಳು ಯುವಕರಲ್ಲಿ ನಾಯಕತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂದು ಹೇಳಿದರು.ಎನ್ಎಸ್ಎಸ್ ಅಧಿಕಾರಿ ಡಾ. ನವೀನ್ ಚಂದ್ರ ಸಿಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಉದ್ದೇಶ, ಗ್ರಾಮಾಭಿವೃದ್ಧಿ ಕಾರ್ಯಗಳು ಹಾಗೂ ವಾರಪೂರ್ತಿ ನಡೆಯಲಿರುವ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಸುರೇಖಾ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಗ್ರಾಮೀಣ ಬದುಕಿನ ಅರಿವು ಪಡೆದು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ಗೋಳಿಯಂಗಡಿಯ ಪ್ರಾಂಶುಪಾಲ ಮಂಜುನಾಥ್ ಪಟಗಾರ ಹಾಗೂ ಜಯರಾಮ ಶೆಟ್ಟಿ ಮಾತನಾಡಿ, “ಎನ್ಎಸ್ಎಸ್ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿದ್ದು, ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ನೆರವಾಗುತ್ತವೆ” ಎಂದು ಅಭಿಪ್ರಾಯಪಟ್ಟರು.

ಶಿಬಿರದ ಅವಧಿಯಲ್ಲಿ ಸ್ವಚ್ಛತಾ ಅಭಿಯಾನ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ಜಾಗೃತಿ, ಬೀದಿ ನಾಟಕ, ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎನ್ಎಸ್ಎಸ್ ಕಾರ್ಯದರ್ಶಿ ಸಮೀರ್ ಸ್ವಾಗತಿಸಿದರು. ಅಂಕಿತ್ ವಂದಿಸಿದರು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಡಾ. ಪ್ರೀತಿ ಹರೀಶ್ ರಾಜ್, ಐಕ್ಯೂಎಸಿ ಸಂಯೋಜನಾಧಿಕಾರಿ ಡಾ. ಜಯಮೋಲ್ ಪಿ.ಎಸ್., ಎನ್ಎಸ್ಎಸ್ ಸಂಯೋಜನಾಧಿಕಾರಿ ಅಮೋಘ್ ಗಾಡರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎನ್ಎಸ್ಎಸ್ ಘಟಕದ ಕಾರ್ಯದರ್ಶಿ ಸಂದೇಶ್ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.



