ಉಡುಪಿ : ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆ ಕುರಿತ ತರಬೇತಿ ಕಾರ್ಯಕ್ರಮವು ನಗರದ ರಜತಾದ್ರಿ ಜಿಲ್ಲಾ ಸಂಪನ್ಮೂಲ ಕೇಂದ್ರ ದಲ್ಲಿ ನಡೆಯಿತು. ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಂಪ್ರಿ ಹವಾಮಾನ ಬದಲಾವಣೆ ವಿಭಾಗದ ಹಿರಿಯ ಸಮಾಲೋಚಕಿ ಡಾ. ಸರಿತಾ ಬೋಯಾ ಮಾಹಿತಿ ನೀಡಿ ಮಾತನಾಡಿ, ಹವಾಮಾನ ಬದಲಾವಣೆಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಜಿಲ್ಲೆಯಲ್ಲಿ ಎದುರಾಗುವ ಹವಾಮಾನ ಸವಾಲುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯ ಅನುಷ್ಠಾನದಲ್ಲಿ ಅಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ತೇಜು ಕುಮಾರ್ ಎನ್ ಕರ್ನಾಟಕ ರಾಜ್ಯ ಜಲ ಸಂಪನ್ಮೂಲ ಕ್ರಿಯಾ ಯೋಜನೆ ಕುರಿತು ಮಾಹಿತಿ ನೀಡಿ, ಜಿಲ್ಲೆಯ ನೀರಿನ ಮೂಲಗಳು, ಅಂತರ್ಜಲ ಮಟ್ಟ, ಮಳೆಯ ಪ್ರಮಾಣ ಹಾಗೂ ನದಿಗಳ ನೀರಿನ ಗುಣಮಟ್ಟದ ಬಗ್ಗೆ ವಿವರಿಸಿದರು. ವಿಕ್ರಮ್ ಆರ್ ಎನ್ಆರ್ಡಿಎಮ್ಎಸ್ ಕೇಂದ್ರದ ಕಾರ್ಯವೈಖರಿ ಹಾಗೂ ವಿವಿಧ ಇಲಾಖೆಗಳ ದತ್ತಾಂಶ ನಿರ್ವಹಣೆಗೆ ನೀಡಲಾಗುತ್ತಿರುವ ಸಹಕಾರ ಕುರಿತು ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ರೆಡ್ಡಪ್ಪ, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ, ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಸನ್ನ ಕುಮಾರ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಎಂಪ್ರಿ ತರಬೇತಿ ಮುಖ್ಯಸ್ಥೆ ಲತಾ ಎಂ.ಹೆಚ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.



