ಉಡುಪಿ : ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ನಡೆಯಿತು. ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಉಡುಪಿ ಜನತೆಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, 2013ರಲ್ಲಿ ಉಡುಪಿ ನಗರ ಭಾಗಕ್ಕೆ ಆರಂಭಗೊಂಡ ನರ್ಮ್ ಬಸ್ ಯೋಜನೆಯಲ್ಲಿ 40ಕ್ಕೂ ಹೆಚ್ಚು ಬಸ್ಗಳಿದ್ದವು. ಆದರೆ ಈಗ ಸರ್ಕಾರದ ಗ್ಯಾರಂಟಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಬಳಿಕ ಶೇ.50ರಷ್ಟು ಬಸ್ಗಳನ್ನು ಕಡಿತಗೊಳಿಸಲಾಗಿದೆ ಎಂದು ಆರೋಪಿಸಿದರು.

ಉಡುಪಿ ಜಿಲ್ಲಾ ಆಸ್ಪತ್ರೆ ಕಾಮಗಾರಿಯನ್ನು ಪೂರ್ಣಗೊಳಿಸದೆ ಜಿಲ್ಲೆಯ ಬಡ ರೋಗಿಗಳ ಜೀವದೊಂದಿಗೆ ಸರ್ಕಾರ ಆಟವಾಡುತ್ತಿದೆ. ಉಡುಪಿಯ ಪರ್ಯಾಯ ಮಹೋತ್ಸವಕ್ಕೆ ಅನುದಾನ ನೀಡುವುದಾಗಿ ಭರವಸೆ ನೀಡಿ ಬಳಿಕ ಬಿಡಿಗಾಸನ್ನೂ ನೀಡದೆ ಅನ್ಯಾಯ ಮಾಡಿದೆ ಎಂದು ದೂರಿದರು. ಇದೇ ವೇಳೆ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿದ್ದಂತೆ ಪ್ರತಿಭಟನಾಕಾರರು ಗೋ ಬ್ಯಾಕ್ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ರಸ್ತೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದ ಪರಿಣಾಮ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆಯಲ್ಲಿ ಸಂಧ್ಯಾ ರಮೇಶ್, ಅಭಿರಾಜ್ ಸುವರ್ಣ, ಶಿವಕುಮಾರ್ ಅಂಬಲಪಾಡಿ, ಸಚಿನ್ ಸುವರ್ಣ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



