ಉಡುಪಿ : ನಗರದ ಬನ್ನಂಜೆ ನಾರಾಯಣಗುರು ಮಂದಿರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟು ಗುಂಡಿಯಾಗಿ ಮಾರ್ಪಟ್ಟಿದ್ದು, ವಾಹನ ಸವಾರ ಆತಂಕ ಸೃಷ್ಟಿಸಿದೆ.

ಬಿರುಕು ಬಿಟ್ಟಿರುವ ರಸ್ತೆಯಲ್ಲಿ ಕಾಂಕ್ರೀಟ್ ಒಳಭಾಗದ ಕಬ್ಬಿಣದ ಸರಳುಗಳು ಮೇಲಕ್ಕೆ ಬಂದಿರುವುದರಿಂದ, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಅಪಘಾತದ ಭೀತಿ ಎದುರಾಗಿದೆ. ಹೆಚ್ಚಿನ ವಾಹನ ದಟ್ಟಣೆ ಇರುವ ಈ ಹೆದ್ದಾರಿ ಇದೀಗ ಅಪಘಾತ ವಲಯವಾಗಿ ಮಾರ್ಪಟ್ಟಿದ್ದು, ಇದೇ ಸ್ಥಳದಲ್ಲಿ ಈಗಾಗಲೇ ಹಲವು ಸಣ್ಣಪುಟ್ಟ ಅಪಘಾತಗಳು ಸಂಭವಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ.

ಸದ್ಯ ಉದ್ಭವಿಸಿರುವ ಸಮಸ್ಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಕೂಡಲೇ ಗಮನಿಸಿ, ರಸ್ತೆಯನ್ನು ತುರ್ತಾಗಿ ದುರಸ್ತಿಪಡಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡಬೇಕು ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.



