ಉಡುಪಿ: ಕುಂದಾಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ದಾಖಲೆಗಳನ್ನು ಪರಿಶೀಲಿಸಿದ ಘಟನೆ ನಡೆದಿದೆ.

ಸಾರ್ವಜನಿಕರಿಂದ ಬಂದ ದೂರುಗಳು ಹಾಗೂ ಸ್ವಯಂಪ್ರೇರಿತ ಪ್ರಕರಣಗಳ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಈ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ವೃತ್ತ ನಿರೀಕ್ಷಕ ಮಂಜುನಾಥ್ ಶಂಕರಳ್ಳಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.

ಪುರಸಭೆಯಲ್ಲಿ ಬಾಕಿ ಇರುವ ಕಡತಗಳ ವಿಲೇವಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ತಂಡ, ಉದ್ದಿಮೆ ಪರವಾನಗಿ, ಖಾತೆ ತಿದ್ದುಪಡಿ ಹಾಗೂ ಖಾತೆ ವರ್ಗಾವಣೆ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿತು.

ಇದರ ಜೊತೆಗೆ ಜನನ ಮತ್ತು ಮರಣ ಪ್ರಮಾಣಪತ್ರಗಳ ಅರ್ಜಿ ವಿಲೇವಾರಿ ಪ್ರಕ್ರಿಯೆ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಪುರಸಭೆ ಸಿಬ್ಬಂದಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ವಿವಿಧ ವಿಷಯಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.


