ಉಡುಪಿ: ಜಿಲ್ಲೆಯ 6 ತಾಲೂಕು ಕಚೇರಿಗಳಲ್ಲಿ ಬಾಕಿ ಉಳಿದಿರುವ ಕಡತಗಳ ವಿಲೇವಾರಿ ಹಾಗೂ ಪರಿಶೀಲನೆಗಾಗಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಬ್ರಹ್ಮಾವರ ತಾಲೂಕು ಕಚೇರಿ ಹೊರತುಪಡಿಸಿ ಜಿಲ್ಲೆಯ ಬೈಂದೂರು, ಕಾಪು, ಹೆಬ್ರಿ, ಉಡುಪಿ, ಕಾರ್ಕಳ, ಕುಂದಾಪುರ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿತು. ಕಚೇರಿಗಳಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಕಡತಗಳು, ಅರ್ಜಿಗಳು ಹಾಗೂ ವಿವಿಧ ಆಡಳಿತಾತ್ಮಕ ವಿಚಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದರು.

ಕುಂದಾಪುರ ತಾಲೂಕು ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದು, ಬಾಕಿ ಇರುವ ಕಡತಗಳ ಸ್ಥಿತಿ, ಅವುಗಳ ವಿಲೇವಾರಿಯಲ್ಲಿ ಆಗಿರುವ ವಿಳಂಬ ಸೇರಿದಂತೆ ಅಗತ್ಯ ಮಾಹಿತಿಯನ್ನು ಲೋಕಾಯುಕ್ತ ತಂಡಗಳು ಪರಿಶೀಲನೆ ನಡೆಸಿತು. ಕಾರ್ಯಾಚರಣೆಯ ವೇಳೆ ಕಚೇರಿಯ ವಿವಿಧ ವಿಭಾಗಗಳ ದಾಖಲೆಗಳನ್ನೂ ಪರಿಶೀಲನೆ ನಡೆಸಲಾಗಿದೆ.

ಉಡುಪಿ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ರಾಘವೇಂದ್ರ ಸಾಲಿಗ್ರಾಮ, ಅರುಣ್ ಕುಮಾರ್, ರಾಘವೇಂದ್ರ ಹೊಸಕಟ್ಟೆ, ಆದರ್ಶ ನಾಯ್ಕ್, ರವೀಂದ್ರ ಹಾಗೂ ಸೂರಜ್ ಸೇರಿದಂತೆ ಸಿಬ್ಬಂದಿ ತಂಡದಲ್ಲಿ ಪಾಲ್ಗೊಂಡಿದ್ದರು. ಬಾಕಿ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗಿರುವ ಕುರಿತು ಪರಿಶೀಲನೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು. ಕಾರ್ಯಾಚರಣೆಯ ಸಂಪೂರ್ಣ ವಿವರಗಳು ಹಾಗೂ ಪರಿಶೀಲನೆಯ ವೇಳೆ ಕಂಡುಬಂದ ಅಂಶಗಳ ಕುರಿತು ಮುಂದಿನ ಹಂತದಲ್ಲಿ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ.


