ಉಡುಪಿ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಅವರ ಕಚೇರಿಗೆ ಸ್ಟಿಕರ್ ಅಂಟಿಸುವುದಾಗಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಯಿತು.

ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಕಚೇರಿಗೆ ಸ್ಟಿಕರ್ ಅಂಟಿಸಲು ಮುಂದಾದ ಹಿನ್ನೆಲೆಯಲ್ಲಿ ಕಚೇರಿ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ನುಗ್ಗದಂತೆ ತಡೆಯುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು, ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಸುನಿಲ್ ಕುಮಾರ್ ಅವರ ಕಾರ್ಯವೈಖರಿಯನ್ನು ಸಹಿಸಲಾಗದೆ ಕಾಂಗ್ರೆಸ್ ಈ ರೀತಿಯ ಕೃತ್ಯಕ್ಕೆ ಮುಂದಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದರು. ಶಾಸಕರ ಕುರಿತು ಅಪಪ್ರಚಾರ ನಡೆಸುವ ಉದ್ದೇಶದಿಂದ ಸ್ಟಿಕರ್ ಅಂಟಿಸಲು ಮುಂದಾಗಿರುವುದು ಕಾಂಗ್ರೆಸ್ ಪಕ್ಷದ ಹತಾಶೆಯನ್ನು ತೋರಿಸುತ್ತದೆ ಎಂದು ಟೀಕಿಸಿದರು.ಶಾಸಕರ ವಿರುದ್ಧ ಯಾವುದೇ ರೀತಿಯ ಅಪಪ್ರಚಾರಕ್ಕೆ ಅವಕಾಶ ನೀಡಬಾರದು. ಅಪಪ್ರಚಾರ ನಡೆಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.

ಈ ಸಂಬಂಧ ತಹಶೀಲ್ದಾರ್ ಕಚೇರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಶಾಸಕರ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ತಡೆಯೊಡ್ಡುವಂತೆ ಒತ್ತಾಯಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾಗಿದ್ದರಿಂದ ಶಾಸಕ ಕಚೇರಿ ಸುತ್ತಮುತ್ತ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.



