Monday, June 30, 2025

spot_img

ಮೋಹನ್‌ ಭಾಗವತ್‌ ದೇಶದ್ರೋಹ ಎಸಗಿದ್ದಾರೆ : ರಾಹುಲ್‌ ಗಾಂಧಿ

ನವದೆಹಲಿ:

    ಭಾರತಕ್ಕೆ ‘ನಿಜವಾದ ಸ್ವಾತಂತ್ರ್ಯ’ 1947 ರಲ್ಲಿ ಸಿಕ್ಕಿಲ್ಲ, ರಾಮ ಮಂದಿರ ಪ್ರತಿಷ್ಠಾಪನಾ ದಿನದಂದು ಸಿಕ್ಕಿತು ಎಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಮೋಹನ್ ಭಾಗವತ್ ಅವರ ಹೇಳಿಕೆ ಎಲ್ಲಾ ಭಾರತೀಯರಿಗೆ ಮಾಡಿದ ಅವಮಾನ ಎಂದು ಟೀಕಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ಮುಖ್ಯಸ್ಥರು ದೇಶದ್ರೋಹ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಂದು ಕಾಂಗ್ರೆಸ್ ನ ನೂತನ ಪ್ರಧಾನ ಕಚೇರಿ, ಇಂದಿರಾ ಗಾಂಧಿ ಭವನ ಉದ್ಘಾಟನೆಯ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಜನರು ಅಂತಹ “ಅಸಂಬದ್ಧ” ಮಾತುಗಳನ್ನು ಕೇಳುವುದನ್ನು ನಿಲ್ಲಿಸುವ ಸಮಯ ಬಂದಿದೆ ಎಂದರು.

   “ಮೋಹನ್ ಭಾಗವತ್ ಅವರು ಸ್ವಾತಂತ್ರ್ಯ ಚಳುವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ದೇಶಕ್ಕೆ ಹೇಳುವ ಧೈರ್ಯ ಹೊಂದಿದ್ದಾರೆ. ಅವರು ನಿನ್ನೆ ಹೇಳಿದ್ದು ದೇಶದ್ರೋಹ… ಏಕೆಂದರೆ ಅವರು ಸಂವಿಧಾನ ಅಮಾನ್ಯವಾಗಿದೆ ಮತ್ತು ಬ್ರಿಟಿಷರ ವಿರುದ್ಧದ ಹೋರಾಟವೂ ಅಮಾನ್ಯ ಎಂದು ಹೇಳುತ್ತಿದ್ದಾರೆ” ಎಂದರು. “ಇದನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನ ಅವರಿಗೆ ಇದೆ. ಬೇರೆ ಯಾವುದೇ ದೇಶದಲ್ಲಿ ಈ ರೀತಿ ಹೇಳಿದ್ದರೆ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ. ಇದು ಸತ್ಯ” ಎಂದು ರಾಹುಲ್ ಗಾಂಧಿ ಹೇಳಿದರು.

  ಇದೇ ವೇಳೆ, ಲೋಕಸಭಾ ಚುನಾವಣೆಯಿಂದ ವಿಧಾನಸಭಾ ಚುನಾವಣೆಯವರೆಗೆ ಮಹಾರಾಷ್ಟ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಭಾರೀ ಹೆಚ್ಚಳದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಚುನಾವಣಾ ಆಯೋಗವನ್ನು ರಾಹುಲ್ ಗಾಂಧಿ ತೀವ್ರ ತರಾಟೆಗೆ ತೆಗೆದುಕೊಂಡರು.

   “ಇದು ಯಾವ ಉದ್ದೇಶವನ್ನು ಪೂರೈಸುತ್ತದೆ? ಇದು ಚುನಾವಣಾ ಆಯೋಗಕ್ಕೆ ಏಕೆ ಹಾನಿ ಮಾಡುತ್ತದೆ? ಅವರು ನಮಗೆ ಪಟ್ಟಿಯನ್ನು ಏಕೆ ನೀಡುತ್ತಿಲ್ಲ? “ಚುನಾವಣೆಗಳಲ್ಲಿ ಪಾರದರ್ಶಕತೆ ಖಚಿತಪಡಿಸಿಕೊಳ್ಳುವುದು ಚುನಾವಣಾ ಆಯೋಗದ ಕರ್ತವ್ಯ. ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮತದಾರರ ಸಂಖ್ಯೆಯಲ್ಲಿ ಒಂದು ಕೋಟಿ ಹೆಚ್ಚಳವಾಗಿದ್ದರೆ, ಅದು ಹೇಗೆ ಸಾಧ್ಯ ಎಂಬುದನ್ನು ನಿಖರವಾಗಿ ನಮಗೆ ತೋರಿಸುವುದು ಚುನಾವಣಾ ಆಯೋಗದ ಕರ್ತವ್ಯ ಮತ್ತು ಪವಿತ್ರ ಜವಾಬ್ದಾರಿಯಾಗಿದೆ. ಆದರೆ “ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ ಇದೆ” ಎಂದು ರಾಹುಲ್ ಗಾಂಧಿ ಹೇಳಿದರು.

  ಇನ್ನು ಭಾಗವತ್ ಅವರ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅವರು ಇಂತಹ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ ದೇಶದಲ್ಲಿ ತಿರುಗಾಡುವುದು ಕಷ್ಟಕರವಾಗುತ್ತದೆ ಎಂದು ಎಚ್ಚರಿಸಿದರು.

   “ಸ್ವಾತಂತ್ರ್ಯದೊಂದಿಗೆ ಯಾವುದೇ ಸಂಬಂಧವಿಲ್ಲದ ಮತ್ತು ಅದಕ್ಕಾಗಿ ಹೋರಾಡದ ಜನರು ಇಂತಹ ಹೇಳಿಕೆ ನೀಡುತ್ತಿದ್ದಾರೆಂದು ನಿಮಗೆ ಗೊತ್ತು. ನಾನು ಆರ್‌ಎಸ್‌ಎಸ್ ಮುಖ್ಯಸ್ಥರ ಹೇಳಿಕೆಯನ್ನು ಓದಿದ್ದೇನೆ. ರಾಮ ಮಂದಿರ ಉದ್ಘಾಟನೆಯೊಂದಿಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಅವರು ಹೇಳಿದರು. ಅವರು ನರೇಂದ್ರ ಮೋದಿ ಅವರೊಂದಿಗೆ ದೇವಾಲಯವನ್ನು ಉದ್ಘಾಟಿಸಿದ್ದರು… 2014 ರಲ್ಲಿ ತಾವು ಪ್ರಧಾನಿಯಾದಾಗ ಸ್ವಾತಂತ್ರ್ಯ ಸಿಕ್ಕಿತು ಎಂದು ಮೋದಿ ನಂಬಿದ್ದಾರೆ” ಎಂದರು.

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles