ಉಡುಪಿ : ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರತೀಕ್ ಬಾಯಲ್ ಹೇಳಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಕ್ಲರ್ಕ್, ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರ, ಪಂಪುಚಾಲಕ, ಜವಾನ, ಸ್ವಚ್ಛತಾಗಾರ ಹಾಗೂ ಗ್ರಂಥಾಲಯ ಮೇಲ್ವಿಚಾರಕರುಗಳಿಗೆ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದ ಬಗ್ಗೆ ನಡೆದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ನೌಕರರಿಗೆ ಆರ್ಥಿಕ ಸೌಲಭ್ಯವನ್ನು ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮೂಲಕ ನೆರವನ್ನು ಒದಗಿಸುತ್ತಿದೆ. ಇದರ ಲಾಭವನ್ನು ಪ್ರತಿಯೊಬ್ಬರೂ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು ಇ.ಎಸ್.ಐ ಹಾಗೂ ಇ.ಪಿ.ಎಫ್.ಓ ಯೋಜನೆಯ ನಿಯಮಾವಳಿಗಳಲ್ಲಿ ಕಾಲಕಾಲಕ್ಕೆ ಬದಲಾವಣೆ ಆಗುತ್ತಿರುತ್ತವೆ. ಇವುಗಳಿಂದ ದೊರಕುವ ಸೌಲಭ್ಯಗಳನ್ನು ಬಳಸುವ ಬಗ್ಗೆ ಪ್ರತಿಯೊಬ್ಬ ಖಾತೆದಾರರು ಮಾಹಿತಿ ಹೊಂದಿರಬೇಕು ಎಂದ ಅವರು, ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದ ಬಗ್ಗೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.

ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೊಳ್ಳಿ, ಜಿಲ್ಲಾ ಇ.ಪಿ.ಎಫ್.ಓ ಎನ್ಫೋರ್ಸ್ಮೆಂಟ್ ಆಫೀಸರ್ ಸಂತೋಷ್ ಅವರು ಇ.ಪಿ.ಎಫ್.ಓ ಯೋಜನೆಯ ಬಗ್ಗೆ ಹಾಗೂ ಇ.ಎಸ್.ಐ ಬ್ರಾಂಚ್ ಮ್ಯಾನೇಜರ್ ಪ್ರಿಯಾಗಿ ಇ.ಎಸ್.ಐ ಸೌಲಭ್ಯದ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ನಿಟ್ಟೂರು ಎನ್.ಸಿ.ಹೆಚ್.ಆರ್ ಸೊಲ್ಯೂಷನ್ಸ್ ಮಾನವ ಸಂಪನ್ಮೂಲ ಸಲಹೆಗಾರ ನವೀನ್ ಚಂದ್ರ, ಜಿಲ್ಲೆಯ ಗ್ರಾಮ ಪಂಚಾಯತ್ಗಳ ಕ್ಲರ್ಕ್, ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರರು, ಪಂಪುಚಾಲಕರು, ಜವಾನರು, ಸ್ವಚ್ಛತಾಗಾರರು ಹಾಗೂ ಗ್ರಂಥಾಲಯ ಮೇಲ್ವಿಚಾರಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಧಿಕಾರಿ ನಿಶ್ಚಿತ್ ಹೆಗ್ಡೆ ಸ್ವಾಗತಿಸಿ, ಪಿ.ಡಿ.ಓ ಅನಿಲ್ ಕುಮಾರ್ ಶೆಟ್ಟಿ ನಿರೂಪಿಸಿ, ರವಿರಾಜ್ ವಂದಿಸಿದರು.



