ಉಡುಪಿ: ಕರ್ನಾಟಕದಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳ ಮೂಲಕ ವ್ಯವಸ್ಥಿತವಾಗಿ ನಡೆಯುತ್ತಿರುವ ಇಎಸ್ಐ ಚಿಕಿತ್ಸಾ ಸೇವೆಯಲ್ಲಿ ಉಂಟಾಗಿರುವ ಗೊಂದಲದಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ, ಯಾವುದೇ ರೋಗಿಗೆ ತೊಂದರೆಯಾಗದಂತೆ ಇಎಸ್ಐ ಸೌಲಭ್ಯದಲ್ಲಿ ಚಿಕಿತ್ಸೆ ನೀಡುವಂತೆ ಕೇಂದ್ರ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗುವ ಇಎಸ್ಐ ರೋಗಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ತಜ್ಞ ವೈದ್ಯರೊಂದಿಗೆ ಸಂಪರ್ಕಿಸಿ ಚಿಕಿತ್ಸೆ ನೀಡಬೇಕೆಂಬ ನಿಯಮವಿದ್ದರೂ, ಕೆಲ ಸಂದರ್ಭಗಳಲ್ಲಿ ಹೃದಯಾಘಾತ, ಮೆದುಳಿನ ಶಸ್ತ್ರಚಿಕಿತ್ಸೆ ಸೇರಿದಂತೆ ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವೈದ್ಯಾಧಿಕಾರಿಗಳಲ್ಲೂ ಆತಂಕ ಉಂಟಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಕಾರ್ಮಿಕ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ವಾರಾಂತ್ಯ, ರಜೆ ದಿನಗಳು ಹಾಗೂ ತುರ್ತು ಸಂದರ್ಭದಲ್ಲಿ ಬರುವ ರೋಗಿಗಳಿಗೆ ಇಎಸ್ಐ ಅಧಿಕಾರಿಗಳು ತಕ್ಷಣ ಸಂಪರ್ಕಕ್ಕೆ ಸಿಗದ ಕಾರಣ ಚಿಕಿತ್ಸೆ ವಿಳಂಬವಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದಿದ್ದರು.ಅಲ್ಲದೆ, ಐಸಿಯುನಲ್ಲಿ ದಾಖಲಾಗಿರುವ ಹಾಗೂ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿರುವ ಗಂಭೀರ ರೋಗಿಗಳಿಗೆ ಅಗತ್ಯವಿರುವ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ದೊರೆಯುತ್ತಿಲ್ಲ. ಕೆಲವು ಆಸ್ಪತ್ರೆಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದಲೂ ವಿಡಿಯೋ ಕರೆ ಸಾಧ್ಯವಾಗುತ್ತಿಲ್ಲ. ಇದರಿಂದ ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಹಾಗೂ ಆದರ್ಶ ದಂತ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಇಎಸ್ಐ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತೊಂದರೆ ಎದುರಿಸುತ್ತಿವೆ ಎಂದು ಸಂಸದರು ವಿವರಿಸಿದ್ದರು.

ರೋಗಿಗಳ ಸಂಕಷ್ಟಕ್ಕೆ ಸ್ಪಂದಿಸಿ, ಸಂಸದರು ಹಾಗೂ ಶಾಸಕರು ಮನವಿ ಮಾಡಿದರೂ ಇಲಾಖೆಯಿಂದ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂಬ ವಿಷಯವನ್ನು ಕೋಟ ಶ್ರೀನಿವಾಸ ಪೂಜಾರಿ ಸಚಿವರ ಗಮನಕ್ಕೆ ತಂದಿದ್ದರು. ಮನವಿಗೆ ತಕ್ಷಣ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸರ್ಕಾರದ ಇಎಸ್ಐ ಮಹಾನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರಿಗೆ ನಿರ್ದೇಶನ ನೀಡಿ, ಇಎಸ್ಐ ಚಿಕಿತ್ಸೆ ಪಡೆಯುತ್ತಿರುವ ಯಾವುದೇ ರೋಗಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆದೇಶಿಸಿದ್ದಾರೆ. ಯಾವುದೇ ಅಧಿಕಾರಿ ಕಾರಣವಿಲ್ಲದೆ ಗೊಂದಲ ಸೃಷ್ಟಿಸಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಸಚಿವರು ಸೂಚಿಸಿದ್ದಾರೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೃತಜ್ಞತೆ ಸಲ್ಲಿಸಿದ್ದಾರೆ.


