Tuesday, March 3, 2026

spot_img

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ತ್ ಆಚರಣೆ

ಉಡುಪಿ: ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್‌ನ್ನು ಕ್ರೆಸ್ತರು ಸೋಮವಾರ ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಧರ್ಮ ಗುರುಗಳು ಭತ್ತದ ತೆನೆಯನ್ನು ಆಶೀರ್ವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನ ಮಾನದ ಕುರಿತು ಪ್ರವಚನ ನೀಡಿದರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಭಾಗವಹಿಸಿ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಈ ವೇಳೆ ಚರ್ಚಿನ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್ ಉಪಸ್ಥಿತರಿದ್ದರು. ತೊಟ್ಟಂ ಸಂತ ಅನ್ನಮ್ಮ ದೇವಾಲಯ ದಲ್ಲಿ ಪ್ರಧಾನ ಧರ್ಮಗುರು ವಂ.ಡೆನಿಸ್ ಡೆಸಾ, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಧರ್ಮಪ್ರಾಂತ್ಯದ ಶ್ರೇಷ್ಠ  ಧರ್ಮಗುರು ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ಶಿರ್ವ ಆರೋಗ್ಯ ಮಾತಾ ಇಗರ್ಜಿಯಲ್ಲಿ ವಂ.ಲೆಸ್ಲಿ ಡಿಸೋಜ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ.ಆಲ್ಬನ್ ಡಿಸೋಜ, ಸಾಸ್ತಾನ ಸಂತ ಅಂತೋನಿ ದೇವಾಲಯದಲ್ಲಿ ವಂ.ಸುನೀಲ್ ಡಿಸಿಲ್ವ ನೇತೃತ್ವದಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆದವು.

ಇದಲ್ಲದೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಸಹ ಹಬ್ಬದ ಬಲಿಪೂಜೆಯನ್ನು ಆಯಾ ಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು. ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ವಿತರಿಸಲಾಯಿತು. ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು. ಅಲ್ಲದೆ ಮನೆಗಳಲ್ಲಿ ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸಿ ಕುಟುಂಬದ ಎಲ್ಲಾ ಸದಸ್ಯರು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವಿಸಿದರು.

ಹಬ್ಬಕ್ಕೆ ಮುಂಚಿತವಾಗಿ 9 ದಿನ ಮಾತೆ ಮೇರಿಯ ಕೃಪೆಯನ್ನು ಬೇಡಿಕೊಂಡು ವಿಶೇಷ ಪ್ರಾರ್ಥನೆ(ನವೇನಾ) ಎಲ್ಲ ಚರ್ಚ್‌ ಗಳಲ್ಲಿ ನಡೆಯುತ್ತದೆ. 9ನೇ ದಿನವನ್ನು ಮೊಂತಿ ಹಬ್ಬವಾಗಿ ಕರಾವಳಿಯ ಕ್ರೆಸ್ತ ಬಂಧುಗಳು ಆಚರಣೆ ಮಾಡಿದ್ದು ಹಬ್ಬದ ದಿನದಂದು ಕನ್ಯಾ ಮರಿಯಮ್ಮ ಅವರ ಮೂರ್ತಿಯನ್ನು ಚರ್ಚ್‌ಗಳ ಮುಂಭಾಗದಲ್ಲಿಟ್ಟು ಕ್ರೆಸ್ತ ಹಾಡುಗಳ ಮೂಲಕ ಪುಟಾಣಿ ಮಕ್ಕಳು ಕನ್ಯಾ ಮರಿಯಮ್ಮರಿಗೆ ಪುಷ್ಪಾರ್ಪಣೆ ಮಾಡಿದ ನಂತರ ಚರ್ಚ್‌ಗಳಲ್ಲಿ ಮೊಂತಿ ಹಬ್ಬಕ್ಕಾಗಿ ವಿಶೇಷ ವಾದ ಪ್ರಾರ್ಥನೆ, ಬಲಿಪೂಜೆಗಳು ನಡೆಯಿತು.

ತೊಟ್ಟಂ ಚರ್ಚಿನಲ್ಲಿ ಹಿಂದು ಭಾಂಧವರಿಗೆ ತೆನೆ ಹಬ್ಬದ ಮೊದಲ ಗೌರವ

ಸೌಹಾರ್ದತೆಗೆ ಹೆಸರಾದ ತೊಟ್ಟಂ ಚರ್ಚಿನಲ್ಲಿ ಹಿಂದೂ ಕುಟುಂಬಕ್ಕೆ ಮೊದಲ ತೆನೆಯನ್ನು ಹಸ್ತಾಂತರಿಸುವ ವಾಡಿಕೆ ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಚರ್ಚ್ ವ್ಯಾಪ್ತಿಯ ಬಾಬಣ್ಣ ಪೂಜಾರಿ ಎಂಬವರ ಕುಟುಂಬದವರು ಚರ್ಚಿನ ಅಗತ್ಯತೆಗೆ ಬೇಕಾಗಿದ್ದ ಸ್ಥಳವನ್ನು ನೀಡಿದ್ದು ಅದಕ್ಕೆ ಕೃತಜ್ಞಾತಾ ಪೂರ್ವಕವಾಗಿ ಪ್ರತಿವರ್ಷ ತೆನೆ ಹಬ್ಬದಂದು ಅವರ ಕುಟುಂಬಕ್ಕೆ ಮೊದಲ ತೆನೆಯನ್ನು ಹಸ್ತಾಂತರಿಸುವ ವಾಡಿಕೆ ನಡೆದುಕೊಂಡು ಬಂದಿದೆ. ಕುಟುಂಬದ ಪರವಾಗಿ ಪುಟ್ಟಯ್ಯ ಪೂಜಾರಿಯವರು ಬಂದು ಧರ್ಮಗುರು ವಂ|ಡೆನಿಸ್ ಡೆಸಾ ಅವರಿಂದ ತೆನೆಯನ್ನು ಗೌರವ ಪೂರ್ವಕವಾಗಿ ಪಡೆದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles