ಉಡುಪಿ : ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇಲ್ಲ. ಚುನಾವಣಾ ಆಯೋಗದ ಕಾರ್ಯಕ್ಕೆ ಅಗತ್ಯ ಸಹಕಾರವನ್ನು ಮಾತ್ರ ಸರ್ಕಾರ ನೀಡುತ್ತಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯನ್ನು ರಾಜಕೀಯ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ. ಯಾವುದೇ ಆಕ್ಷೇಪ ಅಥವಾ ಸಮಸ್ಯೆಗಳಿದ್ದರೆ ರಾಜಕೀಯ ಆರೋಪ ಮಾಡುವ ಬದಲು ನೇರವಾಗಿ ಚುನಾವಣಾ ಆಯೋಗದ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.

ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಅಗತ್ಯ ನೆರವು ನೀಡುತ್ತಿದೆ. ಸಾರ್ವಜನಿಕರು ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ಅವರು ಮನವಿ ಮಾಡಿದರು. ಕಾಂಗ್ರೆಸ್ ಪಕ್ಷ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿಲ್ಲ. ಆದರೆ ಈ ಪ್ರಕ್ರಿಯೆಯ ಮೂಲಕ ಅರ್ಹ ಮತದಾರರ ಹಕ್ಕು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆಯೇ ಅಥವಾ ಯಾವುದೇ ಗುಪ್ತ ಉದ್ದೇಶ ಇದೆಯೇ ಎಂಬ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸವನ್ನು ಪಕ್ಷ ಮಾಡುತ್ತಿದೆ ಎಂದು ಹೇಳಿದರು.

ಎಸ್ಐಆರ್ ಪ್ರಕ್ರಿಯೆ ಯಾವುದೇ ರೀತಿಯಲ್ಲಿ ದುರುಪಯೋಗವಾಗಬಾರದು. ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಬಾರದು. ಅದೇ ವೇಳೆ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹರಿಗೆ ಮತದಾನದ ಹಕ್ಕು ದೊರಕುವಂತೆ ಕ್ರಮ ಕೈಗೊಳ್ಳಬೇಕು. ಈ ಎಲ್ಲ ವಿಚಾರಗಳು ಚುನಾವಣಾಧಿಕಾರಿಗಳ ವ್ಯಾಪ್ತಿಗೆ ಸೇರಿದ್ದು, ಇದೇ ನಿಲುವನ್ನು ಕಾಂಗ್ರೆಸ್ ನಿರಂತರವಾಗಿ ಪ್ರತಿಪಾದಿಸುತ್ತ ಬಂದಿದೆ ಎಂದು ಖಾದರ್ ತಿಳಿಸಿದರು.


