ಉಡುಪಿ : ಜಿಲ್ಲೆಯ ವಿವಿಧ ದ್ವೀಪಗಳನ್ನು ಒಳಗೊಂಡಂತೆ ಸಂಪೂರ್ಣ ಕರಾವಳಿ ಪ್ರದೇಶದಲ್ಲಿ ಹೊಸ ದೃಷ್ಟಿಕೋನದೊಂದಿಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಸೀಮಿತವಾಗದೆ, ರಾಜ್ಯ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸೈಂಟ್ ಮೇರಿಸ್ ಐಲ್ಯಾಂಡ್ನಲ್ಲಿ ಮೊದಲ ಬಾರಿಗೆ 77ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ದ್ವೀಪ ಸೇರಿದಂತೆ ರಾಜ್ಯದಲ್ಲಿರುವ 116 ದ್ವೀಪಗಳು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಅಪಾರವಾದ ಪ್ರಕೃತಿ ಸಂಪನ್ಮೂಲಗಳಿದ್ದರೂ ಪ್ರವಾಸೋದ್ಯಮದ ದೃಷ್ಟಿಯಿಂದ ಸಮರ್ಪಕವಾಗಿ ಬಳಸಿಕೊಳ್ಳಲು ನಾವು ವಿಫಲರಾಗಿದ್ದೇವೆ ಎಂದರು.

ಸೈಂಟ್ ಮೇರಿಸ್ ಐಲ್ಯಾಂಡ್ ಕರ್ನಾಟಕದ ಅತಿದೊಡ್ಡ ದ್ವೀಪವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಇಂತಹ ಅಪರೂಪದ ಸ್ಥಳದಲ್ಲಿ ಧ್ವಜಾರೋಹಣ ನೆರವೇರಿಸಿ ಜನರನ್ನು ಉದ್ದೇಶಿಸಿ ಮಾತನಾಡುವ ಅವಕಾಶ ಸಿಕ್ಕಿರುವುದು ನನ್ನ ಪಾಲಿಗೆ ಸೌಭಾಗ್ಯವಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಕರಾವಳಿ ಕಾವಲು ಪಡೆಯ 11 ಬೋಟ್ಗಳನ್ನು ಪರಿಶೀಲಿಸಿದ್ದು, ಇದು ರೋಮಾಂಚಕಾರಿ ಅನುಭವ ನೀಡಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪಾ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





