Friday, June 27, 2025

spot_img

ಕೆಂಪೇಗೌಡರ ದೂರದೃಷ್ಠಿಯಲ್ಲಿ ಬೆಂಗಳೂರು ನಗರ ನಿರ್ಮಾಣ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ : ನಾಡಪ್ರಭು ಕೆಂಪೇಗೌಡರು ಭವಿಷ್ಯದ ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರವು ಇಂದು ಇಡೀ ವಿಶ್ವದ ಜನರನ್ನು ತನ್ನತ್ತ ಸೆಳೆಯುವಂತೆ ಮಾಡುವುದರೊಂದಿಗೆ ಕೋಟ್ಯಾಂತರ ಜನರು ಬದುಕು ಕಟ್ಟಿಕೊಳ್ಳಲು ಆಶ್ರಯ ನೀಡಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಬೆಂಗಳೂರು ನಗರ ನಿರ್ಮಾಣ ಕೆಂಪೇಗೌಡರ ಅತಿದೊಡ್ಡ ಕನಸಾಗಿತ್ತು. ನಗರ ನಿರ್ಮಾಣಕ್ಕೆ ಬೇಕಾದ ಅಗತ್ಯತೆಗಳ ಬಗ್ಗೆ ಸ್ಪಷ್ಟತೆ ಹೊಂದಿದ್ದ ಅವರು, ನಾಡಿನ ಭವಿಷ್ಯದ ದೃಷ್ಠಿಯಿಂದ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಇಂತಹ ದೂರದೃಷ್ಠಿಯುಳ್ಳ ನಾಯಕರು ಆಡಳಿತ ವ್ಯವಸ್ಥೆಗೆ ಮಾದರಿ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರು. ಮೂಲಭೂತ ಸೌಕರ್ಯಗಳೊಂದಿಗೆ ನಾಡುಕಟ್ಟಿ ನಾಗರಿಕರ ಸಂಪಾದನೆಗೆ ದಾರಿ ಮಾಡಿಕೊಟ್ಟ ಕೆಂಪೇಗೌಡರು ಎಲ್ಲರ ಮನದಲ್ಲೂ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಇಂದಿನ ಪೀಳಿಗೆಗೆ ಕೆಂಪೇಗೌಡರ ಬಗ್ಗೆ ಮನದಟ್ಟು ಮಾಡುವ ಉದ್ದೇಶದಿಂದ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ನಾಡಿನಲ್ಲಿ ಜೀವಿಸುತ್ತಿರುವ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳ ವ್ಯಕ್ತಿತ್ವವನ್ನು ಜೀವನದಲ್ಲಿ ರೂಪಿಸಿಕೊಳ್ಳುವುದರೊಂದಿಗೆ ವಿದ್ಯಾವಂತರಾಗಿ, ಉತ್ತಮ ನಾಗರಿಕರಾಗಿ ಬಾಳಬೇಕು ಎಂದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಉಪನ್ಯಾಸ ನೀಡಿ ಮಾತನಾಡಿ, ರಾಜನಾದವನು ಸಮಾಜದ ಚಿಂತನೆ ಮಾಡುವುದರೊಂದಿಗೆ ದೂರದೃಷ್ಠಿಯಿಂದ ಆಡಳಿತ, ಪ್ರಗತಿಪರ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬುದಕ್ಕೆ ಸ್ಪಷ್ಟ ನಿದರ್ಶನ ನಾಡಪ್ರಭು ಕೆಂಪೇಗೌಡರು. ವಿಜಯನಗರ ಸಾಮ್ರಾಜ್ಯದ ಸಾಮಂತರಲ್ಲಿ ಕೆಂಪೇಗೌಡರ ಮನೆತನವೂ ಒಂದು. ಬಾಲ್ಯದಿಂದಲೇ ಆಡಳಿತ, ಯುದ್ಧಕಲೆ, ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಂಡಿದ್ದ ಅವರು, ವೈಭವಯುತ ಹಂಪಿ ಉತ್ಸವ ಕಂಡು ಬೆರಗಾಗಿ, ನಗರ ನಿರ್ಮಾಣದ ಕನಸು ಕಂಡಿದ್ದರು. ಕೋಟೆ ಮತ್ತು ಪೇಟೆ ಅವರ ಅಭಿವೃದ್ಧಿಯ ಕಲ್ಪನೆಯಾಗಿತ್ತು ಎಂದರು.
ಒಕ್ಕಲಿಗ ಸೇವಾ ಸಂಘದ ಕಾರ್ಯದರ್ಶಿ ಹೇಮಾನಂದ ಹಲ್ದಡ್ಕ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ಐರೀನ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಒಕ್ಕಲಿಗ (ಗೌಡ) ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಸೀತಾರಾಮ ಗೌಡ ಎ, ಸಂಘದ ಪದಾಧಿಕಾರಿಗಳು, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ, ಉಪನ್ಯಾಸಕರುಗಳು, ವಿದ್ಯಾರ್ಥಿನಿಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ದಯಾನಂದ ಡಿ ಕಿದಿಯೂರು ನಿರೂಪಿಸಿ, ಉಪನ್ಯಾಸಕ ಗಂಗಾಧರ್ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles