ಉಡುಪಿ : ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಪಡಿಸಲು ಅನುಕೂಲ ವಾಗುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಸೂದೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿರುವುದಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಸರಕಾರದ ಕಾರ್ಯವೈಖರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿನ ಕೆರೆಗಡಿ ಅಂಚಿನಿಂದ 30 ಮೀಟರ್ ಬಫರ್ ಜೋನ್ ಇರುವುದರಿಂದ ಸಾಲಿಗ್ರಾಮ ಪಟ್ಟಣ ಪಂಚಾಯಿತ ವ್ಯಾಪ್ತಿಯಲ್ಲಿ ಅತಿ ಕಡಿಮೆ ಜಾಗ ಹೊಂದಿರುವವರಿಗೆ ಮನೆ ನಿರ್ಮಾಣ ಹಾಗೂ ಇತರೆ ಅಭಿವೃದ್ಧಿ ಕೈಗೊಳ್ಳಲು ತುಂಬಾ ತೊಂದರೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕರು ಇಲಾಖಾ.ಸಚಿವರು ಹಾಗೂ ಕಾರ್ಯದರ್ಶಿಗಳ ನಿರಂತರ ಸಂಪರ್ಕದಲ್ಲಿದ್ದು ಪ್ರಯತ್ನ ಫಲಪ್ರದ ಕಂಡಿದೆ. ಕೆರೆಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಯಾದಲ್ಲಿ ತುಂಡು ಭೂಮಿ ಹೊಂದಿದವರಿಗೆ ತುಂಬಾ ಅನುಕೂಲವಾಗಲಿದೆ ಎಂದು ಈ ಬಗ್ಗೆ ಸಂತಸ ಶಾಸಕರು ವ್ಯಕ್ತಪಡಿಸಿದ್ದಾರೆ.