ಉಡುಪಿ : ಗಡಿಪಾರು ಆದೇಶ ಉಲ್ಲಂಘಿಸಿ ಪರಾರಿಯಾಗಿದ್ದ ಮಹಮ್ನದ್ ಪೈಝಲ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ಗಡಿಪಾರು ಆದೇಶದ ಪ್ರತಿಯನ್ನು ನೀಡಲು ತೆರಳಿದ ವೇಳೆ, ಪೈಝಲ್ ತನ್ನ ಕಾರನ್ನು ಹಿಮ್ಮುಖವಾಗಿ ಚಲಿಸಿ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದ. ಈ ವೇಳೆ ಕಾರು ಸಂಪೂರ್ಣ ಜಖಂ ಗೊಂಡಿತ್ತು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಂತರ ಅಪಘಾತಕ್ಕೊಳಗಾದ ಕಾರನ್ನು ಪರಿಶೀಲಿಸಿದಾಗ, ಅದರೊಳಗೆ ಸುಮಾರು 173 ಗ್ರಾಂ ಗಾಂಜಾ ಪತ್ತೆಯಾಗಿದೆ. ಇದರಿಂದ ಮಾದಕ ವಸ್ತು ಪ್ರಕರಣವೂ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಯನ್ನು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಆರೋಪಿಯು ಕಾರ್ಕಳ ನಿವಾಸಿಯಾಗಿದ್ದು, ಕಾರ್ಕಳ ಪೊಲೀಸರೇ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



