ಉಡುಪಿ : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಅನ್ವಯ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ನಿಗದಿಪಡಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಹೆಬ್ರಿ, ಕುಂದಾಪುರ, ಬೈಂದೂರು, ಉಡುಪಿ, ಬ್ರಹ್ಮಾವರ, ಕಾಪು ಹಾಗೂ ಕಾರ್ಕಳ ತಾಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ಸಂಖ್ಯೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ. ಅದರಂತೆ ಹೆಬ್ರಿ ತಾಲೂಕಿನಲ್ಲಿ 122, ಕುಂದಾಪುರದಲ್ಲಿ 602, ಬೈಂದೂರಿನಲ್ಲಿ 259, ಉಡುಪಿ ತಾಲೂಕಿನಲ್ಲಿ 329, ಬ್ರಹ್ಮಾವರದಲ್ಲಿ 412, ಕಾಪು ತಾಲೂಕಿನಲ್ಲಿ 290 ಹಾಗೂ ಕಾರ್ಕಳ ತಾಲೂಕಿನಲ್ಲಿ 399 ಸದಸ್ಯ ಸ್ಥಾನಗಳನ್ನು ನಿಗದಿ ಮಾಡಲಾಗಿದೆ.

ಈ ನಿಗದಿಗೆ ಸಂಬಂಧಿಸಿದಂತೆ ಯಾರಾದರೂ ಆಕ್ಷೇಪಣೆ ಸಲ್ಲಿಸಲು ಬಯಸಿದಲ್ಲಿ ಏಪ್ರಿಲ್ 24ರ ಸಂಜೆ 5 ಗಂಟೆಯೊಳಗಾಗಿ ಆನ್ಲೈನ್ ಮೂಲಕ ಅಥವಾ ಅಂಚೆ ಮೂಲಕ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, ಬೆಂಗಳೂರು ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.



