ಉಡುಪಿ : ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು–2026 ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು, ಹೋಟೆಲ್, ಬಾರ್-ರೆಸ್ಟೋರೆಂಟ್ ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳು ತ್ಯಾಜ್ಯವನ್ನು ಕಡ್ಡಾಯವಾಗಿ ಮೂಲದಲ್ಲಿಯೇ ವಿಂಗಡಿಸಿ ನೀಡಬೇಕು ಎಂದು ಪಟ್ಟಣ ಪಂಚಾಯತ್ ಸೂಚಿಸಿದೆ.

ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಏಪ್ರಿಲ್ 1, 2026ರಿಂದ ಜಾರಿಗೆ ತಂದಿರುವ ನಿಯಮಗಳ ಅನ್ವಯ ತ್ಯಾಜ್ಯವನ್ನು ಹಸಿ, ಒಣ, ಸ್ಯಾನಿಟರಿ ಹಾಗೂ ವಿಶೇಷ ಕಾಳಜಿ ತ್ಯಾಜ್ಯ ಎಂಬ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ಪಟ್ಟಣ ಪಂಚಾಯತ್ ಘನತ್ಯಾಜ್ಯ ಸಂಗ್ರಹ ವಾಹನಗಳಿಗೆ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಸಿ ತ್ಯಾಜ್ಯವನ್ನು ಮನೆ ಹಂತದಲ್ಲಿಯೇ ಪೈಪ್ ಕಾಂಪೋಸ್ಟ್, ಬಿನ್ ಕಾಂಪೋಸ್ಟ್ ಅಥವಾ ಪಿಟ್ ಕಾಂಪೋಸ್ಟ್ ವಿಧಾನಗಳ ಮೂಲಕ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್ ಹಾಗೂ ಬಟ್ಟೆಯಂತಹ ಒಣ ತ್ಯಾಜ್ಯ, ಡೈಪರ್ ಮತ್ತು ಸ್ಯಾನಿಟರಿ ನ್ಯಾಪ್ಕಿನ್ಗಳಂತಹ ಸ್ಯಾನಿಟರಿ ತ್ಯಾಜ್ಯ ಹಾಗೂ ಪೇಂಟ್ ಡಬ್ಬಿ, ಅವಧಿ ಮೀರಿದ ಔಷಧಿ, ಬಲ್ಬ್, ಬ್ಯಾಟರಿ, ಸಿರಿಂಜ್ ಮುಂತಾದ ವಿಶೇಷ ಕಾಳಜಿ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡಬೇಕು ಎಂದು ಸೂಚಿಸಲಾಗಿದೆ.

ನಿಯಮಾನುಸಾರ ತ್ಯಾಜ್ಯ ವಿಂಗಡಣೆ ಮಾಡದವರ ವಿರುದ್ಧ ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು–2026ರ ಅಡಿಯಲ್ಲಿ ದಂಡ ವಿಧಿಸುವುದಲ್ಲದೆ, ಅಗತ್ಯವಿದ್ದಲ್ಲಿ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಘನತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಚೇರಿ ಮನವಿ ಮಾಡಿದೆ.



