ಉಡುಪಿ : ಬೈಂದೂರು ಉತ್ಸವ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಪ್ರದರ್ಶಿಸುವುದರೊಂದಿಗೆ, ಗ್ರಾಮೀಣ ಭಾಗದ ಜನರಿಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಲಾಭ ದೊರಕುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೈಂದೂರು ಉತ್ಸವ – ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬೈಂದೂರು ಉತ್ಸವ ಕಾರ್ಯಕ್ರಮವು ಜನವರಿ 24 ರಿಂದ 26 ರ ವರೆಗೆ ಬೈಂದೂರಿನಲ್ಲಿ ನಡೆಯಲಿದೆ. ಉತ್ಸವದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಿ, ಜನಸಾಮಾನ್ಯರಿಗೆ ತಲುಪುವಂತೆ ಮಾಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಠಿಸುತ್ತಿರುವ ಸಂಜೀವಿನಿ ಸಂಘದ ಸದಸ್ಯರುಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಗಳು ಉತ್ಸವದಲ್ಲಿ ನಡೆಯಲಿದೆ ಎಂದರು.

ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಬೈಂದೂರು ಕ್ಷೇತ್ರದ ಪ್ರವಾಸೋದ್ಯಮ ಅವಕಾಶಗಳನ್ನು ಪರಿಚಯಿಸುವುದರೊಂದಿಗೆ, ಮತ್ತಷ್ಟು ಅಭಿವೃದ್ಧಿಪಡಿಸಲು, ಹೆಚ್ಚು ಹೆಚ್ಚು ಹೂಡಿಕೆದಾರರನ್ನು ಸೆಳೆಯುವಂತೆ ಮಾಡುವ ಉದ್ದೇಶದಿಂದ ಬೈಂದೂರು ಉತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕೇವಲ ಉತ್ಸವ ಆಗಿರದೇ ಮಾಹಿತಿ ಕಾರ್ಯಕ್ರಮವೂ ಆಗಿರಲಿದೆ. ಕ್ಷೇತ್ರದ ವಿಶೇಷತೆ, ಗ್ರಾಮೀಣ ಸೊಗಡು, ಆಹಾರೋತ್ಪನ್ನಕ್ಕೆ ಪೂರಕವಾಗಿ ವಿವಿಧ ಮಳಿಗೆಗಳು, ಕಲಾ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ ಹೀಗೆ ಎಲ್ಲವೂ ಉತ್ಸವದಲ್ಲಿ ಇರಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ. ಎಫ್. ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



