ಉಡುಪಿ: ತುಳುಕೂಟ ಉಡುಪಿ (ರಿ) ವತಿಯಿಂದ 24ನೇ ವರ್ಷದ ಕಸ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ಕೆಮ್ತೂರು ತುಳು ನಾಟಕ ಪರ್ಬ ಜನವರಿ 5ರಿಂದ 11ರವರೆಗೆ ಎಂ.ಜಿ.ಎಂ. ಕಾಲೇಜು ಮುದ್ದಣ ಮಂಟಪದಲ್ಲಿ ನಡೆಯಲಿದೆ ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್ ಉಡುಪಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಏಳು ಪ್ರಸಿದ್ಧ ತುಳು ಹವ್ಯಾಸಿ ನಾಟಕ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದರು.ಜನವರಿ 5ರಂದು ಸಂಜೆ 5 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಲಿದ್ದು, ಉದ್ಯಮಿ ಕೆ.ಎಂ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಪ್ರೊ. ವನಿತಾ ಮಯ್ಯ ಮುಖ್ಯ ಅತಿಥಿಗಳಾಗಿರುತ್ತಾರೆ.

ಜನವರಿ 5ರಿಂದ 11ರವರೆಗೆ ಪ್ರತಿದಿನ ವಿವಿಧ ತಂಡಗಳಿಂದ ತುಳು ನಾಟಕ ಪ್ರದರ್ಶನ ನಡೆಯಲಿದ್ದು, ವಿಜೇತರಿಗೆ ರೂ.20,000, ರೂ.15,000 ಹಾಗೂ ರೂ.10,000 ನಗದು ಬಹುಮಾನ ನೀಡಲಾಗುತ್ತದೆ. ಅಲ್ಲದೆ ನಿರ್ದೇಶನ, ಸಂಗೀತ, ನಟ–ನಟಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿಶೇಷ ಬಹುಮಾನಗಳೂ ಇರುತ್ತವೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಎಂ.ಜಿ.ಎಂ. ಕಾಲೇಜು ಉಡುಪಿ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಈ ಪ್ರತಿಷ್ಠಿತ ತುಳು ನಾಟಕ ಪರ್ಬ ಆಯೋಜಿಸಲಾಗಿದೆ.



