ಉಡುಪಿ : ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ನವೆಂಬರ್ 3 ರಿಂದ ಡಿಸೆಂಬರ್ 2 ರವರೆಗೆ ಜಾನುವಾರುಗಳಿಗೆ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದ್ದು, ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಟ್ಟೆಚ್ಚರ ವಹಿಸುವುದರೊಂದಿಗೆ ಯಾವುದೇ ಜಾನುವಾರುಗಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ಮಂಗಳೂರು ಕೆ.ಎಂ.ಎಫ್ ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್, ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಳೆದ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,05,518 ಜಾನುವಾರುಗಳ ಗುರಿ ನಿಗಧಿಪಡಿಸಿ, 1,93,496 ಜಾನುವಾರುಗಳಿಗೆ ಲಸಿಕೆ ಹಾಕಿಸಿ ಶೇ. 96 ರಷ್ಟು ಪ್ರಗತಿ ಸಾಧಿಸಲಾಗಿದೆ. ಎಂಟನೇ ಸುತ್ತಿಗೆ 1,93,496 ಗುರಿ ನಿಗಧಿಪಡಿಸಿ, ಈವರೆಗೆ 88,556 ಜಾನುವಾರುಗಳಿಗೆ ಲಸಿಕೆ ಹಾಕಿಸಲಾಗಿದೆ. ಇದು ಪ್ರತಿಶತಃ ನೂರರಷ್ಟು ಪ್ರಗತಿಯಾಗಬೇಕು.
ಸ್ವರೂಪ ಟಿ.ಕೆ (ಜಿಲ್ಲಾಧಿಕಾರಿ)



