ಉಡುಪಿ : ಜಿಲ್ಲಾ ರೆಡ್ಕ್ರಾಸ್ ಸೊಸೈಟಿಯ ಸಭಾಪತಿಯಾಗಿ ವೈದ್ಯರಾದ ಡಾ. ಅಶೋಕ್ ಕುಮಾರ್ ವೈ.ಜಿ. ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ರೆಡ್ಕ್ರಾಸ್ ಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ವಾರ್ಷಿಕ ಮಹಾಸಭೆಯವರೆಗೆ ಅವರು ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಸ್ತುತ ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಭಾಪತಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಸ್ರೂರು ರಾಜೀವ್ ಶೆಟ್ಟಿ ಅವರು ಜಿಲ್ಲಾ ಸಭಾಪತಿ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಆಡಳಿತ ಮಂಡಳಿ ಅಂಗೀಕರಿಸಿ, ಅವರ ಸ್ಥಾನಕ್ಕೆ ಡಾ. ಅಶೋಕ್ ಕುಮಾರ್ ವೈ.ಜಿ. ಅವರನ್ನು ನೇಮಕ ಮಾಡಿದೆ. ಬಳಿಕ ಡಾ. ಅಶೋಕ್ ಕುಮಾರ್ ಅವರು ಬಸ್ರೂರು ರಾಜೀವ್ ಶೆಟ್ಟಿ ಅವರಿಂದ ಅಧಿಕಾರ ಸ್ವೀಕರಿಸಿದರು. ಕಳೆದ ಒಂದೂವರೆ ದಶಕದಿಂದ ಜಿಲ್ಲಾ ರೆಡ್ಕ್ರಾಸ್ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿರುವ ಅವರು ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇದೇ ವೇಳೆ, ಜಿಲ್ಲಾ ರೆಡ್ಕ್ರಾಸ್ ಉಪಸಭಾಪತಿಯಾಗಿ ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ ಅವರನ್ನು ನೇಮಕ ಮಾಡಲಾಗಿದ್ದು, ಅವರು ಕೂಡ ಅಧಿಕಾರ ಸ್ವೀಕರಿಸಿದರು.

ಸಭಾಪತಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿ ಇದೀಗ ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಭಾಪತಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಸ್ರೂರು ರಾಜೀವ್ ಶೆಟ್ಟಿ ಅವರ ಸೇವೆಯನ್ನು ಆಡಳಿತ ಮಂಡಳಿ ಪ್ರಶಂಸಿಸಿದೆ. ಅವರು ಜಿಲ್ಲಾ ಆಡಳಿತ ಮಂಡಳಿಯ ಸದಸ್ಯರಾಗಿ ಮುಂದುವರಿಯಲಿದ್ದಾರೆ.



