ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದ ತಾಲೂಕು ಕಚೇರಿಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ ( ಲೀಗಲ್ ಕ್ಲಿನಿಕ್) ಇತ್ತೀಚೆಗೆ ಉದ್ಘಾಟನೆಗೊಂಡಿತು. ಹೈಕೋರ್ಟ್ ನ್ಯಾಯಧೀಶ ಹಾಗು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷ ವಿ.ಕಾಮೇಶ್ವರ್ ರಾವ್ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿದರು.
ಈ ಕಚೇರಿಯಲ್ಲಿ ಉಚಿತ ಕಾನೂನು ಸಲಹೆ ಹಾಗು ನೆರವನ್ನು ನೀಡಲಾಗುತ್ತದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಓರ್ವ ವಕೀಲರು ಲಭ್ಯರಿರುತ್ತಾರೆ. ವಾರದ ಸೋಮವಾರ ಹಾಗು ಶುಕ್ರವಾರ ಮಧ್ಯಾಹ್ನ 2 ರಿಂದ 6 ರವರೆಗೆ ತೆರೆದಿರುತ್ತದೆ. ಹೈಕೋರ್ಟ್ ನ್ಯಾಯಧೀಶ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಧೀಶ ಇ.ಎಸ್.ಇಂದಿರೇಶ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಕಿರಣ್. ಎಸ್.ಗಂಗಣ್ಣನವರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗಿಶ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಎಸ್ಪಿ ಡಾ.ಅರುಣ್ ಉಪಸ್ಥಿತರಿದ್ದರು.