ಉಡುಪಿ : ಕಂಪನಿ ನಾಟಕಗಳ ಹಿನ್ನಲೆಯನ್ನು ಬಳಸಿ ಹೊಸರೂಪ ಕೊಟ್ಟವರು ಕಾರಂತರು. ನಾಟಕಗಳಲ್ಲಿ ವಿಶಿಷ್ಟ ಪರ್ಯಾಯಗಳ ಸೃಷ್ಟಿಸುತ್ತಾ ವಿಶಿಷ್ಟ ನಾಟಕ ರಚನೆ ಮಾಡಿವವರು ಕಾರಂತರು. ಪ್ರಯೋಗಶೀಲತೆಯ ಪರಂಪರೆಯೇ ಕಾರಂತರ ನಾಟಕಗಳ ವೈಶಿಷ್ಟ್ಯ ಎಂದು ಖ್ಯಾತ ರಂಗನಿರ್ದೇಶಕ ಡಾ. ಶ್ರೀಪಾದ ಭಟ್ ಹೇಳಿದರು. ಅವರು ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇವರ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಡಾ.ಶಿವರಾಮ ಕಾರಂತರ ನಾಟಕಗಳ ಸ್ವರೂಪ ಅಧ್ಯಯನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಡಾ.ಶಿವರಾಮ ಕಾರಂತರನ್ನು ಕೇಂದ್ರವಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಸಾಹಿತ್ಯ ಪ್ರಕಾರಗಳನ್ನು ಪರಿಚಯಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು, ಓದುವಿಕೆಯ ಹವ್ಯಾಸದಿಂದಾಗಿ ವ್ಯಕ್ತಿತ್ವದಲ್ಲಿ ಪರಿಣಾಮಕಾರಿ ಉತ್ತಮ ಬದಲಾವಣೆಯನ್ನು ತರಲು ಸಾಧ್ಯ ಎಂದರು. ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಚೇತನ್ ಶೆಟ್ಟಿ ಕೋವಾಡಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸದಾ ಸಕರಾತ್ಮಕ ಭಾವನೆಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಂಡಾಗ ಜೀವನದಲ್ಲಿ ಯಶಸ್ವಿಗೊಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವಸಂತ ಜಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಗಂಗಾಧರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿ, ಕಾಲೇಜಿನ ಸಚಿನ್ ನಿರೂಪಿಸಿ, ಕನ್ನಡ ಸಹಾಯಕ ಪ್ರಾಧ್ಯಾಪಕ ಮಹಾಲಿಂಗಪ್ಪ ವಂದಿಸಿದರು.


