ಉಡುಪಿ: ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಹಾಗೂ ಸಹ ಪ್ರಾಧ್ಯಾಪಕ (ಕೃಷಿ ಇಂಜಿನಿಯರಿಂಗ್) ಡಾ. ಶಂಕರ್ ಎಂ. ಅವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕೃಷಿ ಸಂಶೋಧನಾ ಕೇಂದ್ರಕ್ಕೆ ಸೇರಿದ ಅಮೂಲ್ಯ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ, ಡಾ. ಶಂಕರ್ ಅವರನ್ನು ಹಿರಿಯೂರಿಯ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಸಹ ಪ್ರಾಧ್ಯಾಪಕರ (ಕೃಷಿ ಇಂಜಿನಿಯರಿಂಗ್) ಹುದ್ದೆಗೆ ವರ್ಗಾಯಿಸಲಾಗಿದೆ. ಡಿ.3ರಿಂದಲೇ ಅವರನ್ನು ಹುದ್ದೆಯಿಂದ ಕಡ್ಡಾಯವಾಗಿ ಬಿಡುಗಡೆಗೊಳಿಸುವಂತೆ ವಿವಿ ಆಡಳಿತಾಧಿಕಾರಿಗಳು ಆದೇಶಿಸಿದ್ದಾರೆ.

ಬ್ರಹ್ಮಾವರ ಕೃಷಿ ಕೇಂದ್ರದ ವ್ಯಾಪ್ತಿಯ ನೂರಾರು ಎಕರೆ ಪ್ರದೇಶದಿಂದ ಲಕ್ಷಾಂತರ ರೂ. ಮೌಲ್ಯದ ಮರಗಳನ್ನು ಅಕ್ರಮವಾಗಿ ಸಾಗಿಸಲಾಗಿದೆ ಎಂಬ ಆರೋಪಗಳು ಇತ್ತೀಚೆಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು.

ಮರಗಳ ಅನುಪಯುಕ್ತ ಗೆಲ್ಲುಗಳನ್ನು ಕಡಿದು ಹಾಕುವ ನೆಪದಲ್ಲಿ ಬೆಲೆಬಾಳುವ ಅಕೇಷಿಯಾ ಮರಗಳನ್ನು ಸಾಗಿಸಿ ಅವ್ಯವಹಾರ ನಡೆಸಲಾಗಿದೆ ಎಂಬ ದೂರು ಕೇಳಿಬಂದಿತ್ತು.

ಈ ಪ್ರಕರಣದಲ್ಲಿ ಶಾಸಕ ಯಶಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ವಿವಾದ ತೀವ್ರಗೊಂಡ ಬೆನ್ನಲ್ಲೇ ಇದೀಗ ಡಾ. ಶಂಕರ್ ಅವರ ವರ್ಗಾವಣೆ ಆದೇಶ ಹೊರಬಿದ್ದಿದೆ.



